ಮಾಲೂರು: ಉತ್ತಮ ಸ್ಥಳೀಯ ಮುಖಂಡರು ಮುಂದಿನ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ವಿ.ಚಂದ್ರಶೇಖರ್ಗೌಡ ತಿಳಿಸಿದರು. ಅವರು ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಮಾಲೂರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ಎನ್ನುವುದು ಸತ್ಯಕ್ಕೆ ದೂರ. ಪೂರ್ವಭಾವಿಯಾಗಿ ತಯಾರಾಗಲು ಅಭ್ಯರ್ಥಿಯನ್ನು ಫೆಬ್ರುವರಿ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ಮಾಜಿ ಶಾಸಕ ಎ.ನಾಗರಾಜು ಮತ್ತು ಕಳೆದ ಬಾರಿ ಸ್ಪರ್ಧಿಸಿ ಸೋಲುಂಡ ಆರ್.ಪ್ರಭಾಕರ್ ಇಬ್ಬರ ನಡುವೆ ಒಬ್ಬರು ಕಣಕ್ಕಿಳಿಯಲಿದ್ದಾರೆ ಎಂದರು.
ಭೂಹಗರಣಗಳಲ್ಲಿ ಭಾಗಿಯಾದ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಕುರಿತು ಸಿಬಿಐ ತನಿಖೆಗೆ ಒಳಪಡಿಸಬೇಕು. ನಿವೇಶನ ನೀಡಲು ಪುರಸಭೆ ಜಮೀನು ಖರೀದಿಸಿದೆ.
ಆದರೆ ಇಲ್ಲಿವರೆಗೂ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡದೆ ಇರುವ ಪುರಸಭೆ ಕಾರ್ಯವೈಖರಿ ಖಂಡಿಸಿ ಫೆ.10 ರಂದು ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ತಾಲ್ಲೂಕಿನ ಟೇಕಲ್ ಹೋಬಳಿಯ ಬಂಡೂರು ಅಗ್ರಹಾರದಲ್ಲಿ ನಡೆಯುವ ಪ್ರಸಿದ್ಧ ರೇಣುಕ ಎಲ್ಲಮ್ಮ ಜಾತ್ರಾ ಮಹೋತ್ಸವಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸುವರು. ಅದೇ ಗ್ರಾಮದಲ್ಲಿ ಜೆಡಿಎಸ್ ಸಭೆ ನಡೆಯಲಿದೆ ಎಂದು ಹೇಳಿದರು.