ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೇಹಿತರಿಂದಲೇ ಹತ್ಯೆಯಾದ ಸೆಕ್ಯುರಿಟಿ ಗಾರ್ಡ್

Last Updated 3 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಡುಗೆ ಮಾಡುವ ವಿಷಯಕ್ಕೆ ಜಗಳವಾಗಿ ಸೆಕ್ಯುರಿಟಿ ಗಾರ್ಡ್ ಒಬ್ಬರನ್ನು ಸ್ನೇಹಿತರೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ವಿಲ್ಸನ್‌ಗಾರ್ಡನ್ ಸಮೀಪದ ವಿನಾಯಕ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.

ಒಡಿಶಾ ಮೂಲದ ಅನಂತ್‌ಕುಮಾರ್ ನಾರಾಯಣ್ ಜೀನಾ (25) ಕೊಲೆಯಾದವರು. ವಿನಾಯಕನಗರ ಐದನೇ ಅಡ್ಡರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಡಿಶಾ ಮೂಲದ ಸುಭಾಷ್, ಸುರಿಕ್, ಜಯಕೃಷ್ಣ, ಫರೀದ ಹಾಗೂ ಫಯಾಜ್ ಎಂಬುವವರು ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಈ ಆರು ಮಂದಿ ವಿವಿಧ ಕಂಪೆನಿಗಳಲ್ಲಿ ಸೆಕ್ಯುರಿಟಿ ಗಾರ್ಡ್‌ಗಳಾಗಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಾಗ ಅಡುಗೆ ಮಾಡುವ ವಿಷಯವಾಗಿ ಅವರ ನಡುವೆ ಜಗಳವಾಗಿದೆ. ಜೀನಾ ಅವರು ಅಡುಗೆ ಮಾಡಲು ನಿರಾಕರಿಸಿದ್ದರಿಂದ ಕೋಪಗೊಂಡ ಆ ಐದು ಮಂದಿ ಒಟ್ಟಾಗಿ ಸೇರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ವಿಲ್ಸನ್‌ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರ ಆತ್ಮಹತ್ಯೆ

ನಗರದ ಮಡಿವಾಳ ಮತ್ತು ಎಲೆಕ್ಟ್ರಾನಿಕ್‌ಸಿಟಿ ಠಾಣೆಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮಿಳುನಾಡು ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕ ಆಡುಗೋಡಿ ಸಮೀಪದ ಬೃಂದಾವನ ಲೇಔಟ್‌ನಲ್ಲಿ ಗುರುವಾರ ಸಂಜೆ ನಡೆದಿದೆ.

ಸತೀಶ್‌ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಸ್ನೇಹಿತರ ಜತೆ ಬೃಂದಾವನ ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸ್ನೇಹಿತರೆಲ್ಲ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮಡಿವಾಳ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT