ಶಿವಮೊಗ್ಗ: ರಾಜ್ಯದಲ್ಲಿನ ಕೇಂದ್ರ ಸಚಿವರು ರಾಜ್ಯಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕೇಂದ್ರ ಸರ್ಕಾರದಿಂದ ಕೊಡಿಸುವಲ್ಲಿ ವಿಫಲರಾಗಿದ್ದು, ಇವರು ರಾಜ್ಯ ಸರ್ಕಾರದೊಂದಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸದೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಸೇರಿದಂತೆ ರಾಜ್ಯಕ್ಕೆ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುವುದು ಎಂದು ಎಚ್ಚರಿಸಿದರು.