ಬೆಂಗಳೂರು: ಎಚ್ಎಎಲ್ ಸಮೀಪದ ಮುನೇಕೊಳಾಲ ಕೊಳೆಗೇರಿಯಲ್ಲಿ ಮಂಗಳವಾರ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಸುಮಾರು 15 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ.
ಕೊಳೆಗೇರಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಹೆಚ್ಚಾಗಿ ವಾಸವಿದ್ದರು. ಗುಡಿಸಲೊಂದರಲಿದ್ದ 5 ಕೆ.ಜಿ ತೂಕದ ಸಿಲಿಂಡರ್ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಸ್ಫೋಟಗೊಂಡು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆ ಅಕ್ಕಪಕ್ಕದ ಗುಡಿಸಲುಗಳಿಗೂ ವ್ಯಾಪಿಸಿದೆ. ಘಟನೆ ವೇಳೆ ಗುಡಿಸಲುಗಳಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ನಾಲ್ಕು ವಾಹನಗಳಲ್ಲಿ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಗುಡಿಸಲುಗಳ ಪಕ್ಕದಲ್ಲೇ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕವಿದೆ. ರಾಶಿಯಾಗಿ ಬಿದ್ದಿರುವ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡಿದ್ದರೆ ಬೆಂಕಿ ನಂದಿಸುವುದು ಕಷ್ಟವಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.