ಚಿತ್ರದುರ್ಗ: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಗಾಂಧಿವಾದಿ, ಡಿ.ಎಸ್.ಚಿದಾನಂದಪ್ಪ ಅವರನ್ನು ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಎರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಚಿದಾನಂದಪ್ಪ ಅವರನ್ನು ಜೋಗಿಮಟ್ಟಿ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅವರು ಭೇಟಿಯಾದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಇಕ್ಕೇರಿ, ಚಿದಾನಂದಪ್ಪ ಅವರ ವೈದ್ಯಕೀಯ ಸೇವೆಗೆ ತಗಲುವ ಖರ್ಚನ್ನು ಸರ್ಕಾರವೇ ಭರಿಸುವುದಾಗಿ ಭರವಸೆ ನೀಡಿದರು.
ಚಿದಾನಂದಪ್ಪ ಅವರ ಹಾರೈಕೆಯಲ್ಲಿ ತೊಡಗಿರುವ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ಪಿ.ವೈ.ದೇವರಾಜ ಪ್ರಸಾದ್ ಅವರು ಚಿದಾನಂದಪ್ಪ ಅವರ ಅನಾರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒಗೆ ವಿವರಿಸಿದರು.
ಜಿಲ್ಲಾ ಪಂಚಾಯ್ತಿ ಸಿಇಒ ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಹಾಜರಿದ್ದರು.