ಯಾದಗಿರಿ: ‘ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಹಕ್ಕುಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದುವುದರ ಜೊತೆಗೆ ಇನ್ನೊಬ್ಬರ ಹಕ್ಕುಗಳಿಗೆ ಚ್ಯುತಿ ಬರದಂತೆ ನಡೆದುಕೊಳ್ಳುವ ಅವಶ್ಯಕತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧೀಶರಾದ ವಿದ್ಯಾವತಿ ಅಕ್ಕಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘಗಳ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಫಾಟಿಸಿ ಅವರು ಮಾತನಾಡಿದರು.
ಭಾರತದ ಸಂವಿಧಾನವು ಎಲ್ಲರೂ ಸಮಾನತೆಯಿಂದ ಬದುಕುವ ಕುರಿತು ಹಲವು ನಿರ್ದೇಶನಗಳನ್ನು ನೀಡಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ಸಂತೋಷ, ಘನತೆ, ಆತ್ಮಗೌರವದಿಂದ ಹಾಗೂ ಬೇರೊಬ್ಬರ ಹಕ್ಕುಗಳಿಗೆ ಚ್ಯುತಿಯಾಗದಂತೆ ಎಚ್ಚರ ವಹಿಸಿ ಬದುಕುವ ಅವಶ್ಯಕತೆ ಇದೆ ಎಂದರು.
ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಹೋರಾಡುವ ಅವಶ್ಯಕತೆ ಇದೆ. ಮಹಿಳೆಯರು, ಅಸಹಾಯಕರು, ದಲಿತರು, ಮಕ್ಕಳು ದೌರ್ಜನ್ಯಕ್ಕೆ ಒಳಗಾದಾಗ ಅವರ ಹಕ್ಕುಗಳ ಸಂರಕ್ಷಣೆಗೆ ಹೋರಾಡುವ ಅಗತ್ಯತೆ ಇದೆ. ನೊಂದವರು ಅಸಹಾಯಕರಾದಾಗ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬಹುದು. ಕೆಲವೊಮ್ಮೆ ಸ್ವಯಂ ಪ್ರೇರಣೆಯಿಂದ ಆಯೋಗವು ದೂರನ್ನು ದಾಖಲಿಸಿಕೊಂಡು ಸರ್ಕಾರದ ಮೂಲಕ ನ್ಯಾಯ ಒದಗಿಸಲು ಪ್ರಯತ್ನಿಸುತ್ತದೆ. ಕೆಲವೊಮ್ಮೆ ಇಂತಹ ಹೋರಾಟದ ಸಂದರ್ಭದಲ್ಲಿ ನ್ಯಾಯ ದೊರೆಯಲು ತೊಂದರೆಯಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರೇತರ ಸಂಸ್ಥೆಗಳು ಅವರಿಗೆ ನ್ಯಾಯ ಒದಗಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸ ನೀಡಿದ ಸರ್ಕಾರಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಎಸ್.ದೇವಿಂದ್ರಪ್ಪ ಹಳಿಮನಿ, ಸಮಾಜದಲ್ಲಿ ಪ್ರತಿಯೊಬ್ಬರು ಸ್ವತಂತ್ರವಾಗಿ, ಸಮಾನತೆಯಿಂದ ಬದುಕುವ ಹಕ್ಕನ್ನು ಪಡೆದಿದ್ದಾರೆ. ಸಮಾಜದಲ್ಲಿ ನಡೆಯುವ ಎಲ್ಲ ರೀತಿಯ ಶೋಷಣೆ ವಿರುದ್ಧ ಧ್ವನಿ ಎತ್ತುವ ಅವಶ್ಯಕತೆ ಇದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್, ಮಾನವನು ಮಾನವೀಯತೆಯಿಂದ ಬದುಕದೇ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ತೊಡಗಿದ್ದು, ಶೋಷಣೆ, ಅನ್ಯಾಯ, ಅತ್ಯಾಚಾರ ಮತ್ತು ದೌರ್ಜನ್ಯಗಳು ಹೆಚ್ಚುತ್ತಿರುವುದು ವಿಷಾದಕರ. ಎಲ್ಲರೂ ಸಮಾಜದಲ್ಲಿ ಗೌರವ, ಘನತೆಯಿಂದ ಬದುಕುವ ಜೊತೆಗೆ ಪ್ರತಿಯೊಬ್ಬರ ಹಕ್ಕುಗಳಿಗೆ ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಮಾನವೀಯತೆಯಿಂದ ಬದುಕುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎ.ಜಿಲಾನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಮಾತಾ ಮಾಣಿಕೇಶ್ವರಿ ಮಹಿಳಾ ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಸಂಗೀತಾ ಹಪ್ಪಳ ವೇದಿಕೆಯಲ್ಲಿದ್ದರು.ನಾಗರತ್ನ ಅನಪುರ ಸ್ವಾಗತಿಸಿ, ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.