ನೆಲಮಂಗಲ: ಆಶ್ರಯ ನಿವೇಶನದ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸದಿರುವುದನ್ನು ಖಂಡಿಸಿ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲ್ಕೂರು ಗ್ರಾಮಸ್ಥರು ತಾ.ಪಂ. ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
`ಆಶ್ರಯ ನಿವೇಶನ ಹಂಚಿಕೆ ಮಾಡಲು ಮೀಸಲಿದ್ದ ಜಾಗವು ವಿವಾದದ ಕಾರಣ 37 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈ ವಿವಾದ ನ್ಯಾಯಾಲಯದ ಮೆಟ್ಟಿಲೇರಿ ಹಕ್ಕುಪತ್ರ ವಿತರಿಸುವಂತೆ ಆದೇಶ ಹೊರಡಿಸಲಾಗಿತ್ತು. ಹಕ್ಕುಪತ್ರಗಳನ್ನು ವಿತರಿಸಲು ತಾ. ಪಂ. ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸದೆ ಅನ್ಯಾಯ ಮಾಡಲಾಗಿತ್ತು~ ಎಂದು ಪ್ರತಿಭಟನಾಕಾರರು ದೂರಿದರು.
`ರಾಜಕೀಯ ದುರುದ್ದೇಶದಿಂದ ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಮಾಡಲಾಗುತ್ತಿದೆ~ ಎಂದು ದೂರಿ ತಾ.ಪಂ.ಸದಸ್ಯೆ ಭಾಗ್ಯಲಕ್ಷ್ಮೀ ಮತ್ತಿತರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.ತಾ.ಪಂ.ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಸ್ಥಳಕ್ಕೆ ಆಗಮಿಸಿ, `15 ದಿನಗಳಲ್ಲಿ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.
ಹಕ್ಕುಪತ್ರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದರು. ಕೊನೆಗೆ ಸ್ಥಳದಲ್ಲಿಯೇ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮೂಲಕ ಹಕ್ಕುಪತ್ರಗಳನ್ನು ಹಸ್ತಾಂತರಿಸಲಾಯಿತು. ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥನಾರಾಯಣ ಗೌಡ, ಮುಖಂಡರಾದ ಗಂಗ ರಾಜು, ನಾಗರತ್ನ, ತೋಪಯ್ಯ, ಅಂಜನಾಮೂರ್ತಿ, ಶ್ರೀನಿವಾಸ್ ಇದ್ದರು.