ಬೆಂಗಳೂರು: `ಎಚ್ಎಂಟಿ ಕಾರ್ಖಾನೆಯ ಜಮೀನು ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ಈ ಆರೋಪ ಆಧಾರರಹಿತ. ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ' ಎಂದು ವಿಧಾನಪರಿಷತ್ ಸದಸ್ಯೆ ಮೋಟಮ್ಮ ಸವಾಲು ಹಾಕಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಬಿಎಂಪಿ ಸದಸ್ಯ ಎನ್.ಆರ್. ರಮೇಶ್ ರಾಜಕೀಯ ಒತ್ತಡಕ್ಕೆ ಒಳಗಾಗಿ ನನ್ನ ವಿರುದ್ಧ ಭೂಹಗರಣದ ಆರೋಪ ಮಾಡಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ' ಎಂದು ಎಚ್ಚರಿಸಿದರು.
`ಎಚ್ಎಂಟಿ ಕಾರ್ಖಾನೆಗೆ ಸೇರಿರುವ 202 ಎಕರೆ ಜಾಗವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುಮತಿ ಪಡೆಯದೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಈ ಹಗರಣದಲ್ಲಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ' ಎಂದು ರಮೇಶ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿದ್ದರು.
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಒಂದು ವೇಳೆ ಪಕ್ಷ ಸೂಚಿಸಿದರೆ ಮೂಡಿಗೆರೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ತಿಳಿಸಿದರು.