ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಜ್ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಿ.ಎಂ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ನಗರದಲ್ಲಿ ಉದ್ದೇಶಿತ ಹಜ್ ಭವನ ನಿರ್ಮಾಣಕ್ಕೆ ಡಿಸೆಂಬರ್ ಮೊದಲ ವಾರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭಾನುವಾರ ಇಲ್ಲಿ ತಿಳಿಸಿದರು.
ಕರ್ನಾಟಕ ರಾಜ್ಯ ಹಜ್ ಸಮಿತಿಯು ನಗರದ ಬೆನ್‌ಸನ್ ಟೌನ್‌ನ ಈದ್ಗಾ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಹಜ್ ಯಾತ್ರಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

`ಸರ್ಕಾರದ ವತಿಯಿಂದ ಈಗಾಗಲೇ ಯಲಹಂಕ ಹೋಬಳಿಯ ತಿರುಮೇನಹಳ್ಳಿ ಗ್ರಾಮದಲ್ಲಿ 3.17 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಭವನ ನಿರ್ಮಾಣದ ಕಾಮಗಾರಿ ಆರಂಭವಾಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿದೆ.ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು~ ಎಂದು ಹೇಳಿದರು.

ಭವನ ನಿರ್ಮಾಣಕ್ಕಾಗಿ ಸರ್ಕಾರ 40 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. ಈಗಾಗಲೇ 15 ಕೋಟಿ ರೂಪಾಯಿಗಳನ್ನು ನೀಡಿದ್ದು, ಉಳಿದ 25 ಕೋಟಿ ರೂಪಾಯಿಗಳನ್ನು ನಂತರದ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ನಿರ್ಮಾಣಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಎದುರಾದರೆ ಹಣ ನೀಡುವುದಾಗಿಯೂ ಭರವಸೆ ನೀಡಿದರು.

ಬಜೆಟ್‌ಗೂ ಮುನ್ನ ಚರ್ಚೆ: ಮುಂದಿನ ಬಜೆಟ್ ವೇಳೆ ಸಮುದಾಯದ ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಪೂರ್ವಭಾವಿಯಾಗಿ ಚರ್ಚಿಸುತ್ತೇನೆ. ನಂತರ ಸಮುದಾಯಕ್ಕೆ ಅವಶ್ಯಕವಾದ ಅನುದಾನ ನೀಡಲು ಕ್ರಮ ತೆಗೆದುಕೊಳ್ಳುತ್ತೇನೆ. ಬಜೆಟ್‌ನಲ್ಲಿ ಸಾಧ್ಯವಾದಷ್ಟು ಹೆಚ್ಚಿನ ಅನುದಾನ ನೀಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಮಧ್ಯವರ್ತಿಗಳಿಗೆ ಎಚ್ಚರಿಕೆ: ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುತ್ತಿಲ್ಲ. ಅನುದಾನ ಮಧ್ಯವರ್ತಿಗಳ ಪಾಲಾಗುತ್ತಿರುವುದು ಗಮನಕ್ಕೆ ಬಂದಿದೆ.

ಸಮುದಾಯಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಮಧ್ಯವರ್ತಿಗಳ ಪಾಲಾಗಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಹಣ ಸೋರಿಕೆಯಾಗದಂತೆ ಕಟ್ಟು ನಿಟ್ಟು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ ಅವರು, ಈ ಮೂಲಕ ಮಧ್ಯವರ್ತಿಗಳಿಗೆ ಎಚ್ಚರಿಕೆ ನೀಡಿದರು.

ಬಕ್ರೀದ್ ಆಚರಣೆಗೆ ರಕ್ಷಣೆ: ಬಕ್ರೀದ್ ಹಬ್ಬದ ಆಚರಣೆ ವೇಳೆ ಮುಸ್ಲಿಂ ಸಮುದಾಯಗಳ ಮೇಲೆ ಹಲ್ಲೆಗಳು ನಡೆಯುತ್ತವೆ. ಈ ಸಂಬಂಧ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂಬ ಶಾಸಕ ಆರ್.ರೋಷನ್ ಬೇಗ್ ಅವರ ಮನವಿಗೆ ಪ್ರತಿಕ್ರಿಯಿಸಿದ ಅವರು, ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಸಮುದಾಯಕ್ಕೆ ರಕ್ಷಣೆ ನೀಡುತ್ತೇವೆ ಎಂದರು.

ರಾಜ್ಯದ ಅಭಿವೃದ್ಧಿಗೆ ಪ್ರಾರ್ಥಿಸಿ: ಸಮುದಾಯದವರು ಹಜ್ ಯಾತ್ರೆ ಕೈಗೊಂಡಿರುವುದು ತುಂಬಾ ಸಂತೋಷವಾಗಿದೆ. ರಾಜ್ಯವು ಬರಗಾಲ, ವಿದ್ಯುತ್ ಕ್ಷಾಮದಿಂದ ತತ್ತರಿಸಿದೆ. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಂತೆ `ಅಲ್ಲಾ~ ನಲ್ಲಿ ಪ್ರಾರ್ಥಿಸಿ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಅಬ್ದುಲ್ ಅಜೀಜ್, `ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವಂತೆ ಸಮುದಾಯದಿಂದ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ ಸ್ಪಂದಿಸಲಿಲ್ಲ.
 
ಕೆಂಪೇಗೌಡರ ಹೆಸರು ನಾಮಕರಣ ಮಾಡಿರುವುದಕ್ಕೆ ಯಾವುದೇ ಬೇಸರವಿಲ್ಲ. ಕನಿಷ್ಟ ಪಕ್ಷ ಮೇಖ್ರಿ ವೃತ್ತದಿಂದ ಬಳ್ಳಾರಿ ರಸ್ತೆವರೆಗೆ ಟಿಪ್ಪುಸುಲ್ತಾನ್ ಹೆಸರು ನಾಮಕರಣ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಭಾರತೀಯ ಹಜ್ ಸಮಿತಿ ಉಪಾಧ್ಯಕ್ಷ ಅಬೂಬ್‌ಕರ್, ಕರ್ನಾಟಕ ಹಜ್ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ ಮೊಯಿನುದ್ದೀನ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿ ಸೈಯದ್ ಜಮೀರ್ ಪಾಷಾ ಹಾಗೂ  ಧಾರ್ಮಿಕ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT