ಚಿತ್ರದುರ್ಗ: ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಆಟೋ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಆಟೋ ಚಾಲಕರು ನಗರಸಭೆ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿಯೇ ರಸ್ತೆ ಅಗೆದಿದ್ದು, ಗುಂಡಿಗಳನ್ನು ಮುಚ್ಚಿಲ್ಲ. ಇದರಿಂದ ನಗರದಲ್ಲಿ ಸಂಚಾರ ದುಸ್ತರವಾಗಿದೆ. ಗುಂಡಿಗಳಿಂದ ಕೂಡಿರುವ ರಸ್ತೆಗಳಿಂದ ಆಟೋಗಳಿಗೂ ಹಾನಿಯಾಗುತ್ತಿದೆ ಎಂದು ದೂರಿದರು.
ನಗರದ ಕೋಟೆ ರಸ್ತೆ, ಚಿಕ್ಕಪೇಟೆ, ದೊಡ್ಡಪೇಟೆ, ಕರುವಿನಕಟ್ಟೆ ವೃತ್ತ, ಜೆಸಿಆರ್ ರಸ್ತೆ, ಗೋಪಾಲಪುರ ರಸ್ತೆ, ಕೆಳಗೋಟೆ, ಮುನ್ಸಿಪಲ್ ಕಾಲೊನಿ, ಪ್ರಸನ್ನ ಟಾಕೀಸ್ ರಸ್ತೆ, ಅಂಬೇಡ್ಕರ್ ಕಲ್ಯಾಣ ಮಂಟಪದ ರಸ್ತೆ ಹಾಗೂ ಇತರೆ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಸಂಚರಿಸಲು ತೊಂದರೆಯಾಗುತ್ತಿದೆ. ನಗರಸಭೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ನಗರಸಭೆ ಗಮನಹರಿಸಿಲ್ಲ. ಈಗಾಗಲೇ ಪೆಟ್ರೋಲ್ ಬೆಲೆ ದುಬಾರಿಯಾಗಿದೆ. ಹದಗೆಟ್ಟ ರಸ್ತೆಗಳಿಂದ ಇಂಧನವೂ ಹೆಚ್ಚಿಗೆ ಬೇಕಾಗುತ್ತದೆ. ಆದ್ದರಿಂದ ತ್ವರಿತಗತಿಯಲ್ಲಿ ರಸ್ತೆಗಳಿಗೆ ಕಾಯಕಲ್ಪ ನೀಡಬೇಕು ಎಂದು ಮನವಿ ಮಾಡಿದರು.
ನಗರದ ರಸ್ತೆ ಸಹ ದೂಳಿನಿಂದ ಕೂಡಿವೆ. ರಸ್ತೆಗಳ ಸ್ವಚ್ಛತೆಗೂ ನಗರಸಭೆ ಗಮನಹರಿಸಬೇಕು. ಸ್ವಚ್ಛತೆಗಾಗಿರುವ ವಾಹನಗಳನ್ನು ಬಳಸಿ ನೈರ್ಮಲ್ಯ ಕಾಪಾಡಬೇಕು ಎಂದು ಕೋರಿದರು.
ಜಿಲ್ಲ ಆಟೋ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷ ತಿಪ್ಪೇಸ್ವಾಮಿ ಹಾಜರಿದ್ದರು.