ಹರಪನಹಳ್ಳಿ: ನಿರ್ಮಲ ಭಾರತ್ ಅಭಿಯಾನ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ತಾಲ್ಲೂಕಿನ ವಿವಿಧೆಡೆ 700ವೈಯಕ್ತಿಕ ಶೌಚಾಲಯ ನಿರ್ಮಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಟಿ. ಪಾಂಡ್ಯಪ್ಪ ಹೇಳಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 144ನೇ ಜಯಂತಿ ಅಂಗವಾಗಿ ತಾಲ್ಲೂಕಿನ ಅಡವಿಹಳ್ಳಿ ಗ್ರಾಮದಲ್ಲಿ ಮಂಗಳವಾರ ಶೌಚಾಲಯ ನಿರ್ಮಾಣಕ್ಕಾಗಿ ಹಮ್ಮಿಕೊಂಡಿದ್ದ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ನಿರ್ಮಲ್ ಭಾರತ್ ಅಭಿಯಾನದಲ್ಲಿ ಪ್ರತಿ ಘಟಕಕ್ಕೆ ್ಙ 4,700 ಮೊತ್ತ ಹಾಗೂ ಖಾತ್ರಿ ಯೋಜನೆ ಅಡಿ ್ಙ 4,500ಮೊತ್ತದ ಅನುದಾನ ಸೇರಿದಂತೆ ಒಟ್ಟು ್ಙ 9,200 ಮೊತ್ತದಲ್ಲಿ ಶೌಚಾಲಯ ನಿರ್ಮಿಸಿಕೊಡುವ ಮೂಲಕ ನಿರ್ಮಲ ಭಾರತ ನಿರ್ಮಾಣ ಮಾಡಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಪ್ರತಿ ಅಂಗನವಾಡಿ ಕೇಂದ್ರಕ್ಕೂ ಶೌಚಾಲಯ
ತಾಲ್ಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಪ್ರತಿ ಅಂಗನವಾಡಿ ಕೇಂದ್ರಕ್ಕೂ ಶೌಚಾಲಯ ನಿರ್ಮಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್. ಸಿದ್ದೇಶಪ್ಪ ತಿಳಿಸಿದರು.
ತಾಲ್ಲೂಕು ಪಂಚಾಯ್ತಿ ಸದಸ್ಯ ಎಂ. ಚೆನ್ನಪ್ಪ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಪದ್ಮಾವತಿ, ಅಭಿಯಾನದ ಸಂಯೋಜಕ ಎಸ್.ಎಂ. ಮಂಜುನಾಥಯ್ಯ, ಉಪ ನೋಂದಣಾಧಿಕಾರಿ ರಾಜಪ್ಪ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಚೆನ್ನವೀರಯ್ಯ ಉಪಸ್ಥಿತರಿದ್ದರು.