ಬೆಂಗಳೂರು: ನಗರದ ಹಲವೆಡೆ ಶನಿವಾರ ಸುರಿದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾದರೆ, ಮತ್ತೊಂದೆಡೆ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು.
ನಗರದಲ್ಲಿ 2 ಮಿ.ಮೀ. ಗರಿಷ್ಠ ಪ್ರಮಾಣದ ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 0.3 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದ ವಿವಿಧ ರಸ್ತೆಗಳು ಅಧಿಕ ಪ್ರಮಾಣದಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಕಬ್ಬನ್ ಉದ್ಯಾನ ರಸ್ತೆ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಕೆಲ ಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ಜ್ಯೋತಿ ನಿವಾಸ ಕಾಲೇಜು ಸಮೀಪ ತುಂಡಾದ ವಿದ್ಯುತ್ ತಂತಿಯ ಸ್ಪರ್ಶದಿಂದ ಹಸುವೊಂದು ಅಸುನೀಗಿದೆ.
ಕೋರಮಂಗಲದ `ನವೀನ್ ಟೆರಸ್ ಅಪಾರ್ಟ್ಮೆಂಟ್ವೊಂದಕ್ಕೆ ನೀರು ನುಗ್ಗಿದ್ದು, `ಸ್ವಾಮಿ~ ಅಪಾರ್ಟ್ಮೆಂಟ್ ಸಮೀಪವೇ ಮರ ಬಿದ್ದಿದೆ. ಕಬ್ಬನ್ ಉದ್ಯಾನದ ಹಾಗೂ ಕೋರಮಂಗಲ ಬಿಡಿಎ ಸಂಕೀರ್ಣದ ಹತ್ತಿರ ಮರದ ಟೊಂಗೆಗಳು ಬಿದ್ದಿವೆ.
ಜೀವನಹಳ್ಳಿಯ ಮೇಲು ಸೇತುವೆಯ ಕೆಳಭಾಗದಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಆನಂತರ ಪಾಲಿಕೆ ಮತ್ತು ಜಲಮಂಡಳಿಯ ಎಂಜಿನಿಯರ್ಗಳು ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು.
ಈಜಿಪುರ ಹಾಗೂ ಸುಭಾಷ ನಗರದಲ್ಲಿ ಚರಂಡಿಗಳು ತುಂಬಿ ರಸ್ತೆ ಹರಿಯುತ್ತಿತ್ತು. ಇದಲ್ಲದೇ, ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟ ಅನುಭವಿಸುವಂತಾಯಿತು. ಉಳಿದಂತೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.