ಹಾಸನ: ಗ್ರಾಮದ ಕೆರೆ ನೀರನ್ನು ಕಾಫಿ ತೋಟಕ್ಕೆ ಹಾಯಿಸಿದ್ದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಮಲ್ಲಾಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ ಮಲ್ಲಾಪುರ ಗ್ರಾಮದ ಕೆರೆಯಿಂದ ಜವರಯ್ಯ ಎಂಬುವರು ತಮ್ಮ ಕಾಫಿ ತೋಟಕ್ಕೆ ನೀರು ಹಾಯಿಸುತ್ತಿದ್ದರು. ಇದನ್ನು ಗ್ರಾಮದ ಪುಟ್ಟಯ್ಯ ಪ್ರಶ್ನಿಸಿದ್ದಕ್ಕೆ ಜವರಯ್ಯ ಹಾಗೂ ಇತರ ಇಬ್ಬರು ಸೇರಿಕೊಂಡು ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಘಟನೆ ಬಳಿಕ ಪುಟ್ಟಯ್ಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜವರಯ್ಯ ವಿರುದ್ಧ ಅರೇಹಳ್ಳಿ ಠಾಣೆ ಪೂಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾ ಕಾರರು ಆರೋಪಿಸಿದರು. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿ ಮನವಿ ಸಲ್ಲಿಸಿದರು.