ಯಾದಗಿರಿ: ಅಧಿಕಾರಿಗಳು ಹಾರಿಕೆ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಜನಪ್ರತಿನಿಧಿಗಳ ಮಾತಿಗೆ ಕಿಮ್ಮತ್ತಿಲ್ಲದಂತಾಗಿದೆ. ತಾಲ್ಲೂಕಿನಾದ್ಯಂತ ಸಸಿ ನೆಡುವುದಾಗಿ ಹೇಳಿ ಅರಣ್ಯ ಇಲಾಖೆಯಿಂದ ಲಕ್ಷಾಂತರ ಅನುದಾನ ಅವ್ಯವಹಾರ ನಡೆದಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ಸದಸ್ಯ ಶರಣಪ್ಪ ಮೋಟ್ನಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಸದಸ್ಯರ ಆರೋಪದ ಕುರಿತು ವಿವರಣೆ ನೀಡಿದ ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿ, ವರದಿ ನೀಡುವುದಾಗಿ ಹೇಳಿದರು. ಆದರೂ ಇದಕ್ಕೆ ಒಪ್ಪದ ಸದಸ್ಯರು, ಈ ಬಗ್ಗೆ ಲೋಕಾಯುಕ್ತ ತನಿಖೆಯಾಗಲಿ ಎಂದು ಪಟ್ಟು ಹಿಡಿದರು.
ಮಧ್ಯೆ ಪ್ರವೇಶಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಸತೀಶ ಜಮಾದಾರ, ಈ ಬಗ್ಗೆ ಮತ್ತೊಮ್ಮೆ ತನಿಖೆ ನಡೆಸಲಾಗುವುದು. ತನಿಖೆಯ ಸಂದರ್ಭದಲ್ಲಿ ಎಲ್ಲ ಸದಸ್ಯರನ್ನೂ ಕಾಮಗಾರಿ ನಡೆದ ಸ್ಥಳಕ್ಕೆ ಕರೆದೊಯ್ಯಲಾಗುವುದು ಎಂದು ಭರವಸೆ ನೀಡುವ ಮೂಲಕ ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿದರು.
ಆದರೂ ಪಟ್ಟು ಬಿಡದ ಸದಸ್ಯರು, ತನಿಖೆ ನಡೆಸಿದ ತಂಡದ ವರದಿಯನ್ನು ಅಧಿಕಾರಿಗಳು ನಮಗೆ ನೀಡುತ್ತಿಲ್ಲ. ಕಳೆದ ಬಾರಿಯ ಸಾಮಾನ್ಯ ಸಭೆಯಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವರದಿ ತಂದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಸದಾಶಿವರಡ್ಡಿ ಬೆಳಗೇರಾ, ತನಿಖಾ ತಂಡ ನೀಡಿದ ವರದಿ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಏಕೆ ಮುಂದಾಗುತ್ತಿಲ್ಲ. ಇದರಿಂದ ಅವರೂ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ ಎಂದರು.
ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಿಗೆ ಪೌಷ್ಟಿಕ ಆಹಾರ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸುತ್ತಿಲ್ಲ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗಮನ ನೀಡುತ್ತಿಲ್ಲ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಸದಸ್ಯ ಸಣ್ಣ ಸಾಬಯ್ಯಾ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ನಡೆಸಿ, ಕೂಲಿ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದಸ್ಯ ಹಣಮಂತ ಲಿಂಗೇರಿ ಮಾತನಾಡಿ, ಲಿಂಗೇರಿ ಗ್ರಾಮಕ್ಕೆ ಪೂರೈಕೆ ಆಗುತ್ತಿರುವುದು ಕುಡಿಯುವ ನೀರಿನಲ್ಲಿ ಕ್ಲೋರೈಡ್ ಅಂಶ ಇರುವುದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೇ ಕಳೆದ ವರ್ಷ ಈ ನೀರನ್ನು ಪರೀಕ್ಷೆಗಾಗಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಆದರೆ ಅದರ ಫಲಿತಾಂಶ ಮಾತ್ರ ಇನ್ನೂ ಬಂದಿಲ್ಲ ಎಂದು ಸಭೆ ಗಮನಕ್ಕೆ ತಂದರು.
ತಾ.ಪಂ. ಅಧ್ಯಕ್ಷೆ ಶೋಭಾರಾಣಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶರಣಮ್ಮ ಕವಾಲ್ದಾರ, ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿ, ಸದಸ್ಯರಾದ ಮಾರುತಿ ಮುಂಡಾಸ್, ಶ್ರೀಲಕ್ಷ್ಮಿ ಚಂಡ್ರಕಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.