ಚಿತ್ರದುರ್ಗ: ‘ಹಿಂದಿನ ಬಿಜೆಪಿ ಸರ್ಕಾರ ಹಿಂದುಳಿದ ಮಠಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಗರದ ಭೋವಿ ವಸತಿ ನಿಲಯದ ಆವರಣದಲ್ಲಿ ಸೋಮವಾರ ನೂತನ ಮೂರು ಶಾಲಾ ಕಟ್ಟಡಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿದರು.
ಶಿಕ್ಷಣ, ವಸತಿ ಹಾಗೂ ದಾಸೋಹದ ಮೂಲಕ ಮಠಗಳು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂದುಳಿದ ಮಠಗಳಿಗೆ ಅನುದಾನ ನೀಡಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ
ಮಠಗಳಿಗೆ ನೀಡಿರುವ ಹಣವನ್ನು ತಡೆ ಹಿಡಿಯುವ ಮೂಲಕ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ದೂರಿದರು.
ಮಠಗಳಿಗೆ ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ಈಗಾಗಲೇ ವಿಧಾನ ಪರಿಷತ್ನ ಚರ್ಚೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದು ಕೊಂಡಿದ್ದೇನೆ. ಅನುದಾನ ಕೊಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದರು.
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಭೋವಿ ಗುರುಪೀಠಕ್ಕೆ ರೂ೨.೫ ಕೋಟಿ ಅನುದಾನ ನೀಡಲಾಗಿದೆ. ಆದರೆ, ಆ ಹಣವನ್ನು ಪಡೆದುಕೊಳ್ಳಲು ಸೆಣಸಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ಹೇಳಿದರು.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಭೋವಿ ವಸತಿ ನಿಲಯದ ಆವರಣದಲ್ಲಿ ನಿರ್ಮಾಣ ವಾಗುತ್ತಿರುವ ಮೂರು ಶಾಲಾ ಕಟ್ಟಡಕ್ಕಾಗಿ ತಮ್ಮ ಶಾಸಕರ ನಿಧಿಯಿಂದ ರೂ10 ಲಕ್ಷ ನೀಡಲಾಗಿದೆ ಎಂದು ಹೇಳಿದರು.
ಸಂಸತ್ ಸದಸ್ಯ ಜನಾರ್ದನಸ್ವಾಮಿ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಸುರಾನ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅನಿಲ್ಕುಮಾರ್, ಸದಸ್ಯ ಡಿ.ರಮೇಶ್, ಭೋವಿ ಸಂಘದ ಅಧ್ಯಕ್ಷ ತಿಮ್ಮಣ್ಣ, ಮಾಜಿ ಅಧ್ಯಕ್ಷ ಗುರಪ್ಪ, ಕಾಂಗ್ರೆಸ್ ಮುಖಂಡ ಡಿ.ಬಸವರಾಜ್, ಜಿ.ಎಂ.ಸುರೇಶ್, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಪ್ಪ, ರುದ್ರಪ್ಪ ಹಾಜರಿದ್ದರು.