ಶ್ರೀರಂಗಪಟ್ಟಣ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ, ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ) ಮಾಜಿ ಅಧ್ಯಕ್ಷ ಎನ್.ಎ. ಚನ್ನೇಗೌಡ (90) ಸೋಮವಾರ ಮುಂಜಾನೆ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಅವರ ಹುಟ್ಟೂರಾದ ತಾಲ್ಲೂಕಿನ ನೆಲಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಹಾಗೂ ಇತರ ಪ್ರಮುಖರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ಅವರು, ಹಿರಿಯ ಗಾಂಧಿವಾದಿಗೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಬಳಿ ಪುಷ್ಪ ನಮನ ಸಲ್ಲಿಸಿದರು.