ಮುನಿರಾಬಾದ್: ಹೈದ್ರಾಬಾದ್ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾಸ್ಥಳ ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಗುರುವಾರ ಬೆಳಿಗ್ಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ, ಕುಂಕುಮಾರ್ಚನೆ ಮಾಡಿಸಿ ದೇವಿಯ ದರ್ಶನ ಪಡೆದರು. ನಂತರ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ರಮೇಶ ವೈದ್ಯ ಶಾಲು ಹೊದಿಸಿ ಅವರನ್ನು ಸನ್ಮಾನಿಸಿದರು.
ದೇವಸ್ಥಾನ ಅಭಿವೃದ್ಧಿ ಕಾಮಗಾರಿಯ ಬಗ್ಗೆ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ರಮೇಶ ವೈದ್ಯರಿಂದ ಈಶ್ವರಪ್ಪ ಮಾಹಿತಿ ಪಡೆದರು. ದೇವಸ್ಥಾನದ ನಿಧಿಯಿಂದ ಸುತ್ತಲಿನ ಜಮೀನನ್ನು ರೈತರಿಂದ ಖರೀದಿಸಿ, ಯಾತ್ರಾರ್ಥಿಗಳಿಗೆ ಮೂಲ ಸೌಲಭ್ಯ ಒದಗಿಸಲು ಮಾಸ್ಟರ್ ಪ್ಲಾನ್ ತಯಾರಿಸಲಾಗಿದ್ದು ಅದರನ್ವಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ವೈದ್ಯ ಮಾಹಿತಿ ನೀಡಿದರು.
ವಿಧಾನಪರಿಷತ್ ಸದಸ್ಯ ಎನ್.ಶಂಕ್ರಪ್ಪ, ತುಂಗಭದ್ರಾ ಕಾಡಾ ಅಧ್ಯಕ್ಷ ಬಸವನಗೌಡ ಬ್ಯಾಗವಾಟ, ಶಾಸಕ ಆನಂದ ಸಿಂಗ್, ಕುರುಬರ ಸಂಘದ ಅಧ್ಯಕ್ಷ ರಘುನಾಥ ಮಲ್ಕಾಪುರೆ ಮತ್ತಿತರರು ಜೊತೆಗಿದ್ದರು.