ಬೆಂಗಳೂರು: ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯ ಸಹಾಯಕ ಸಬ್ಇನ್ಸ್ಪೆಕ್ಟರ್ (ಎಎಸ್ಐ) ಜೆ.ಎನ್.ನಂಜುಂಡೇಗೌಡ (52) ಅವರು ಚೌಡಯ್ಯ ಸ್ಮಾರಕ ಭವನದ ಬಳಿ ಬುಧವಾರ ಬೆಳಿಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಹೃದಯಾಘಾತವಾಗಿ ಕುಸಿದು ಬಿದ್ದ ನಂಜುಂಡೇಗೌಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಜುಟ್ಟನಹಳ್ಳಿ ಗ್ರಾಮದ ನಂಜುಂಡೇಗೌಡ ಅವರು 1979ರಲ್ಲಿ ಇಲಾಖೆಗೆ ಸೇರಿದ್ದರು. ಅವರು ಕುಟುಂಬ ಸದಸ್ಯರೊಂದಿಗೆ ಪೀಣ್ಯ ಬಳಿಯ ಕೆಂಪೇಗೌಡನಗರದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.