ಜೇವರ್ಗಿ: ‘ಏಪ್ರಿಲ್ 17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ದೂಳಿ ಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶಿವಾನಂದ ಕಲ್ಲೂರ್ ಹೇಳಿದರು.
ಅವರು, ಶುಕ್ರವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
’ಈಗಾಗಲೇ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ದೇಶದ ಸಮರ್ಥ ನಾಯಕ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ರಾಜ್ಯದ ಮತದಾರರು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಎದ್ದು ಕಾಣುತ್ತಿದೆ’ ಎಂದು ಅವರು ಹೇಳಿದರು.
’ಕಳೆದ ಒಂದು ತಿಂಗಳಲ್ಲಿ ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ವಿಜಾಪುರ, ಗುಲ್ಬರ್ಗ, ಬೀದರ್, ರಾಯಚೂರ, ಬಳ್ಳಾರಿ, ಕೊಪ್ಪಳ ಕ್ಷೇತ್ರಗಳಲ್ಲಿ ಸಂಚರಿಸಿದ್ದೇನೆ. ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಹೈದರಾಬಾದ ಕರ್ನಾಟಕ ಹಾಗೂ ಮುಂಬಯಿ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಭರವಸೆ ಮೂಡಿದೆ’ ಎಂದಿದ್ದಾರೆ.
‘ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ದೇಶದ ಜನತೆ ನಿರ್ಧರಿಸಿದ್ದು, ಯಾವ ಶಕ್ತಿಗಳು ಅವರನ್ನು ತಡೆಯಲು ಸಾಧ್ಯವಿಲ್ಲ. ದೇಶ ಭಕ್ತಿ ಇದ್ದವರು ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಅವರನ್ನು ಬೆಂಬಲಿಸಲಿದ್ದಾರೆ. ಕೇಂದ್ರದಲ್ಲಿ ಎನ್ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶ ಮತ್ತಷ್ಟು ಬಲಿಷ್ಠಗೊಳ್ಳಲಿದೆ’ ಎಂದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಅಶೋಕ ಅಲ್ಲಾಪುರ, ರಮೇಶಬಾಬು ವಕೀಲ್, ಬಸವರಾಜ ಪಾಟೀಲ್ ನರಿಬೋಳ ಇದ್ದರು.