ಬೆಂಗಳೂರು: ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿದ ಬಳಿಕವೇ ಲೋಕಸಭಾ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ಆರಂಭಿಸಲು ಸಿದ್ಧಪಡಿಸಲು ಶನಿವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಂಭವನೀಯ ಅಭ್ಯರ್ಥಿಗಳ ಕುರಿತು ಕೆಪಿಸಿಸಿ ವೀಕ್ಷಕರು ಲೋಕಸಭಾ ಕ್ಷೇತ್ರಗಳಿಗೆ ಭೇಟಿನೀಡಿದ ಬಳಿಕ ಸಲ್ಲಿಸಿದ ವರದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಕಳುಹಿಸಿರುವ ಶಿಫಾರಸುಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಬೇಕಿತ್ತು. ಆದರೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಸಭೆಯಲ್ಲಿ ಹಾಜರಿರದ ಕಾರಣ ಈ ವರದಿಗಳ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.
ಅಭ್ಯರ್ಥಿ ಆಯ್ಕೆಗೆ ಮಾನದಂಡ: ಲೋಕ-ಸಭಾ ಚುನಾವಣೆಗೆ ಅಭ್ಯರ್ಥಿಗಳಾಗುವವರು ಕನಿಷ್ಠ ಐದು ವರ್ಷ ಕಾಲ ಪಕ್ಷ ಸಂಘಟನೆಗೆ ದುಡಿದಿರಬೇಕು, ಕ್ರಿಮಿನಲ್ ಹಿನ್ನೆಲೆ ಉಳ್ಳವರಾಗಿರಬಾರದು ಎಂಬ ಮಾನದಂಡ ಪ್ರಮುಖವಾಗಿ ಅಳವಡಿಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
‘ಎಲ್ಲ ಹಾಲಿ ಸಂಸದರಿಗೆ ಟಿಕೆಟ್ ನೀಡಬೇಕು ಮತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತವರಿಗೂ ಟಿಕೆಟ್ ನೀಡಬೇಕು ಎಂಬ ಒಲವು ಸಭೆಯಲ್ಲಿ ವ್ಯಕ್ತವಾಗಿದೆ. ಹೊಸ ಮುಖಗಳಿಗೆ ಆದ್ಯತೆ ದೊರೆಯಬೇಕು. ಎಲ್ಲ ಜಾತಿ, ಧರ್ಮಗಳಿಗೆ ನಿಗದಿತ ಪ್ರಾತಿ-ನಿಧ್ಯ ಕಲ್ಪಿಸಬೇಕು ಎಂಬ ಚರ್ಚೆ ನಡೆದಿದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚರ್ಚೆ ಬಳಿಕ ಸಭೆ: ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ವಿವಿಧ ಮೂಲಗಳಿಂದ ರಹಸ್ಯ ವರದಿಗಳನ್ನು ಪಡೆದುಕೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಪಕ್ಷದ ವರಿಷ್ಠರ ಜೊತೆ ಚರ್ಚೆ ನಡೆಸಬೇಕು. ಬಳಿಕ ಮತ್ತೊಮ್ಮೆ ಸಭೆ ನಡೆಸಿ ಕೆಪಿಸಿಸಿ ಬಳಿ ಇರುವ ವರದಿಗಳ ಕುರಿತು ಚರ್ಚಿಸಬೇಕು ಎಂಬ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರು ಹೈಕಮಾಂಡ್ ಭೇಟಿಗಾಗಿ ಒಂದೆರಡು ದಿನಗಳಲ್ಲಿ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬಳಿಕ 15 ದಿನಗಳೊಳಗೆ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಮುಖಂಡರೊಬ್ಬರು ತಿಳಿಸಿದರು.
ಅಭ್ಯರ್ಥಿಗಳ ಆಯ್ಕೆಯಲ್ಲಿ ಸ್ಥಳೀಯ ಮುಖಂಡರ ಅಭಿಪ್ರಾಯಕ್ಕೂ ಮಾನ್ಯತೆ ನೀಡಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ. ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಪಕ್ಷದ ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸುವರು ಎಂದರು.
ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ನಡೆದ ಚುನಾವಣಾ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಗಳಾದ ಶಾಂತಾರಾಂ ನಾಯ್ಕ್, ಡಾ.ಚೆಲ್ಲಕುಮಾರ್, ಸಚಿವ ಕೆ.ಜೆ.ಜಾರ್ಜ್, ಶಾಸಕರಾದ ಡಿ.ಕೆ.ಶಿವಕುಮಾರ್, ಕೆ.ಬಿ.ಕೋಳಿವಾಡ, ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.