ಬೆಂಗಳೂರು: ಆಸ್ತಿ ವಿವರ ಘೋಷಿಸದ ಬೆಂಗಳೂರು ವಿಭಾಗದ ವ್ಯಾಪ್ತಿಯ ಜಿಲ್ಲಾ ಪಂಚಾಯತಿಗಳ 255 ಸದಸ್ಯರನ್ನು ಅನರ್ಹಗೊಳಿಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ಇತ್ಯರ್ಥಪಡಿಸಿದೆ.
ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ವಿಭಾಗೀಯ ಪೀಠ, ಅರ್ಜಿಯನ್ನು ಪ್ರಾದೇಶಿಕ ಆಯುಕ್ತರ ಮುಂದೆ ಸಲ್ಲಿಸುವಂತೆ ನಿರ್ದೇಶಿಸಿದೆ.
ಶಶಿಧರ್ ಅವರು ಸಲ್ಲಿಸಿರುವ ಮನವಿಗೆ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಇದಕ್ಕೆ ಉತ್ತರ ನೀಡುತ್ತಾರೆ ಎಂದು ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಅವರು ವಾದ ಮಂಡಿಸಿದ ನಂತರ ವಿಭಾಗೀಯ ಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು.
1993ರ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ನಿಯಮದಂತೆ ಪ್ರತಿ ವರ್ಷ ಜನವರಿ ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸದಸ್ಯರು ಆಸ್ತಿಯ ವಿವರವನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಬೇಕು.
ಆದರೆ, ಬೆಂಗಳೂರು ವಿಭಾಗಕ್ಕೆ ಸೇರುವ ೯ ಜಿಲ್ಲೆಗಳಲ್ಲಿನ ೨೮೫ ಜಿಲ್ಲಾ ಪಂಚಾಯತ್ ಸದಸ್ಯರಲ್ಲಿ ೩೫ ಸದಸ್ಯರು ಮಾತ್ರ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿದ್ದಾರೆ. ಉಳಿದವರು ಆಸ್ತಿ ವಿವರ ಘೋಷಿಸದೆ ನಿಯಮವನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ಶಶಿಧರ್ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು.
ಬೆಂಗಳೂರಿನ ೩೩ ಸದಸ್ಯರು ಸೇರಿದಂತೆ , ಗ್ರಾಮಾಂತರದ ೧೮, ರಾಮನಗರ ೨೨, ಕೋಲಾರ ೨೬, ತುಮಕೂರು ೫೭, ಚಿತ್ರದುರ್ಗದ ೩೪ , ದಾವಣಗೆರೆಯ ೩೪ ಹಾಗೂ ಶಿವಮೊಗ್ಗದ ೧೪ ಜನ ಜಿಲ್ಲಾ ಪಂಚಾಯತ್ ಸದಸ್ಯರು ಆಸ್ತಿ ಪ್ರಮಾಣ ಘೋಷಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
ಪ್ರಾದೇಶಿಕ ಆಯುಕ್ತರಿಂದ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.