ರಾಮನಗರ: ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಅಂದಾಜು 3.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕೂಡಲೇ ಆದೇಶ ಹೊರಡಿಸುವುದಾಗಿ ಸಾರಿಗೆ ಹಾಗೂ ಗೃಹ ಸಚಿವ ಆರ್.ಅಶೋಕ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೀಶ್ವರ್ ಅವರೊಂದಿಗೆ ರಾಮನಗರ ಜಿಲ್ಲಾ ಕೇಂದ್ರದ ಬಸ್ ನಿಲ್ದಾಣವನ್ನು ಪರಿಶೀಲಿಸಿದ ಅವರು ನಂತರ ಸುದ್ದಿಗಾರರ ಜತೆ ಮಾತನಾಡಿದರು.ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇರುವ ರಾಮನಗರದ್ಲ್ಲಲಿ ಉತ್ತಮವಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇಲ್ಲ ಎಂಬುದನ್ನು ಸಚಿವ ಯೋಗೀಶ್ವರ್ ಅವರು ನನ್ನ ಗಮನಕ್ಕೆ ತಂದಿದ್ದಾರೆ.
ಹಾಗಾಗಿ ದಿಢೀರ್ ಸ್ಥಳ ಪರಿಶೀಲನೆಗೆ ಬಂದು, ಸುಂದರ್ ಬಸ್ ನಿಲ್ದಾಣ ನಿರ್ಮಾಣಕ್ಕೆ ತೀರ್ಮಾನ ತೆಗೆದುಕೊಂಡಿದ್ದೇನೆ. ಹಾಲಿ ಬಸ್ ನಿಲ್ದಾಣದಲ್ಲಿ ಇರುವ ಹಳೆ ಕಟ್ಟಡವನ್ನು ತೆರವುಗೊಳಿಸಿ, ಅಲ್ಲಿ ಹೊಸ ನಿಲ್ದಾಣದ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಪ್ರತಿಕ್ರಿಯಿಸಿದರು.
ಇಲ್ಲಿನ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ರಾಜ್ಯದ ವಿವಿಧ ಭಾಗದ ಸಹಸ್ರಾರು ಸಂಖ್ಯೆಯಲ್ಲಿ ರೇಷ್ಮೆ ಕೃಷಿಕರು ನಿತ್ಯ ರಾಮನಗರಕ್ಕೆ ಬಂದು ಹೋಗುತ್ತಾರೆ. ಅಲ್ಲದೆ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಮತ್ತಿತರರು ನಿತ್ಯ ಸಂಚರಿಸುವ ಈ ಭಾಗದಲ್ಲಿ ಉತ್ತಮ ಬಸ್ ನಿಲ್ದಾಣದ ಅಗತ್ಯವಿದ್ದು, ತುರ್ತು ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.
ಗೂಡು ಮಾರುಕಟ್ಟೆ ಮುಂಭಾಗದಲ್ಲಿ ಸುಮಾರು ಎರಡು ಎಕರೆ ಜಾಗವನ್ನು ಇಲ್ಲಿನ ಶಾಸಕರು ಬಿಡಿಸಿಕೊಟ್ಟರೆ ಅಲ್ಲಿಯೂ ಒಂದು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಅಶೋಕ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.