ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಸ್ಪೀಡ್ ರೈಲಿಗೆ ವಿರೋಧ

Last Updated 16 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಹೈಸ್ಪೀಡ್ ರೈಲು ಅಗತ್ಯವಿಲ್ಲ. ಬದಲಿಗೆ ಮೆಟ್ರೊ ಯೋಜನೆಯನ್ನೇ ವಿಸ್ತರಿಸಬೇಕು~ ಎಂದು ಸಂಸದ ಅನಂತಕುಮಾರ್ ಅಭಿಪ್ರಾಯಪಟ್ಟರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಕಿತ್ತೂರು ರಾಣಿ ಚನ್ನಮ್ಮ ಆಟದ ಮೈದಾನದಲ್ಲಿ ಬೈರಸಂದ್ರ ವಾರ್ಡ್‌ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು `ಆರೂವರೆ ಸಾವಿರ ಕೋಟಿ ರೂಪಾಯಿ ವೆಚ್ಚದ ಹೈಸ್ಪೀಡ್ ರೈಲು ಯೋಜನೆಯನ್ನು ಕೈ ಬಿಡಬೇಕು~ ಎಂದು ಆಗ್ರಹಿಸಿದರು.

`ಕೇಂದ್ರ ಸರ್ಕಾರವು ಬೆಂಗಳೂರು ಮೆಟ್ರೊಗೆ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಅಲ್ಲದೇ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಗೌಡ ಕೆಂಪೇಗೌಡರ ಹೆಸರಿಡುವುದರ ಕುರಿತು ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿಗೆ ಮನವಿ ಮಾಡಲು ರಾಜ್ಯದಿಂದ ಸಚಿವರು, ಸಂಸದರು, ಶಾಸಕರನ್ನು ಒಳಗೊಂಡ ನಿಯೋಗ ಸದ್ಯದಲ್ಲೇ ದೆಹಲಿಗೆ ತೆರಳಲಿದೆ~ ಎಂದು ತಿಳಿಸಿದರು.

 `ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದಲೇ ಕೇಂದ್ರಕ್ಕೆ ಸುಮಾರು 60 ಸಾವಿರ ಕೋಟಿ ರೂಪಾಯಿ ಆದಾಯವಿದೆ. ಆದರೂ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಧನಸಹಾಯ ನೀಡಲು ಹಿಂಜರಿಯುತ್ತಿದೆ~ ಎಂದು ದೂರಿದರು.

ಸಚಿವ ಆರ್.ಅಶೋಕ, `ಪಾಲಿಕೆಯು ನಗರಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು~ ಎಂದರು.

`ಪ್ಲಾಸ್ಟಿಕ್ ನಿಬರ್ಂಧದ ಕುರಿತ ಪಾಲಿಕೆಯ ಆದೇಶವು ಆದೇಶವಾಗಿಯೇ ಉಳಿದಿದ್ದು, ಈ ನಿಟ್ಟಿನಲ್ಲಿ ಮೇಯರ್ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು~ ಎಂದು ಸಲಹೆ ನೀಡಿದರು.

ಶಾಸಕ ಬಿ.ಎನ್.ವಿಜಯಕುಮಾರ್, ಮೇಯರ್ ಪಿ.ಶಾರದಮ್ಮ, ಪಾಲಿಕೆ ಸದಸ್ಯ ಎನ್.ನಾಗರಾಜು ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT