ದಾವಣಗೆರೆ: ಅಕ್ರಮ ಮರಳು ತಡೆಗೆ 2011ರ ತಮಿಳುನಾಡು ಮಾದರಿ ನೀತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆಗೆ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಸೂಚಿಸಿದರು.
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅಕ್ರಮ ಮರಳು ಸಾಗಣೆ ತಡೆ ಕರಿತು ಚರ್ಚಿಸಲಾಯಿತು.ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹೆಚ್ಚಾಗಿದ್ದು, ಇದರ ತಡೆಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ದಾಖಲೆಗಳು ಇಲ್ಲದೇ, ಅನಧಿಕೃತವಾಗಿ ಮರಳು ಸಾಗಣೆ ಮಾಡುವ ವಾಹನಗಳನ್ನು ವಶಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗೆ ತಿಳಿಸಿದರು.ತಿಂಗಳಲ್ಲಿ 2, 3 ಬಾರಿ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡು ಕ್ರಮ ಜರುಗಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಎಸ್. ವೆಂಕಟೇಶ್ ಮಾತನಾಡಿ, ಮರಳುಗಾರಿಕೆ ತಡೆಯುವಲ್ಲಿ ಸೂಕ್ತ ಭದ್ರತೆ ಒದಗಿಸುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಮರಳುಗಾರಿಕೆಗೆ 56 ಬ್ಲಾಕ್ಗಳಲ್ಲಿ ಟೆಂಡರ್ ಕರೆಯಲಾಗಿದ್ದು, 42 ಅರ್ಜಿಗಳ ಬಂದಿದ್ದು, ಉಳಿದಂತೆ 14 ಅರ್ಜಿಗಳು ಬಂದಿಲ್ಲ. ಸೂಕ್ತರೀತಿ ಸ್ಪಂದನೆ ವ್ಯಕ್ತವಾಗಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಎಚ್.ಬಿ. ಮಲ್ಲೇಶ್ ಮಾಹಿತಿ ನೀಡಿದರು.
ತಹಶೀಲ್ದಾರ್ ಡಾ.ಬಿ.ಆರ್. ಹರೀಶ್, ಮಾಜಿ ಮೇಯರ್ ವಸಂತಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎನ್. ಶಿವಕುಮಾರ್, ಯೋಜನಾ ನಿರ್ದೇಶಕ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.