ಚನ್ನರಾಯಪಟ್ಟಣ: ‘ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯ್ದೆ’ಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮಿನಿವಿಧಾನ ಸೌಧದ ಆವರಣದಲ್ಲಿ ಸೇರಿದರು.
‘ಉದ್ದೇಶಿತ ಕಾಯ್ದೆಯ ಹೆಸರಿನಲ್ಲಿ ಇಡೀ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ವಿದ್ಯಾರ್ಥಿಗಳಿಗೆ ಮಾರಕವಾದ ಈ ನೀತಿಯನ್ನು ಸರ್ಕಾರ ಜಾರಿ ಮಾಡಲು ಮುಂದಾಗುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.
‘ವೈದ್ಯಕೀಯ ಶಿಕ್ಷಣ ಸಚಿವರ ವರ್ತನೆ ಸರಿಯಲ್ಲ. ಸರ್ಕಾರ ಕಾಮೆಡ್–ಕೆ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ರಾಜ್ಯ ಸರ್ಕಾರ ಸಿಇಟಿ ಮೂಲಕವೇ ವೃತ್ತಿ ಶಿಕ್ಷಣ ಸಂಸ್ಥೆಗಳಿಗೆ ಸೀಟು ಹಂಚಿಕೆ ಮಾಡಬೇಕು ಹಾಗೂ ಶುಲ್ಕ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಎನ್.ಡಿ. ಧನಲಕ್ಷ್ಮೀ, ಎಂ.ಜೆ. ಪೃಥ್ವಿ, ರಾಘವೇಂದ್ರ ನೇತೃತ್ವ ವಹಿಸಿದ್ದರು.