ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 19 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಅರಕಲಗೂಡು: ಗೊರೂರು ಹೇಮಾವತಿ ನದಿಗೆ ನಿರ್ಮಿಸಿರುವ ಸೇತುವೆ ಶಿಥಿಲಗೊಂಡಿದ್ದು ಬದಲಿ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

 ಗೊರೂರು ಸೇತುವೆಯ ಮೇಲೆ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಧರಣಿ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು ಎರಡು ಗಂಟೆ ಕಾಲ ಪ್ರತಿಭಟನೆ ಮುಂದುವರೆದ ಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.

100 ವರ್ಷ ಹಿಂದೆ  ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆ ಶಿಥಿಲಗೊಂಡು ಕುಸಿಯುವ ಸ್ಥಿತಿಯಲ್ಲಿದೆ. ಪ್ರತಿನಿತ್ಯ ನೂರಾರು ವಾಹನಗಳು ಇದೇ ಸೇತುವೆ ಮೇಲೆ ಸಂಚರಿಸುತ್ತಿದ್ದು ಯಾವಾಗ ಏನು ಅವಘಡ ಸಂಭವಿಸುತ್ತದೊ ಎಂಬ ಭೀತಿ ಉಂಟಾಗಿದೆ. ಈ ಕುರಿತು ಹಲವಾರು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಜಿಲ್ಲಾ ಆಡಳಿತದ ಗಮನಕ್ಕೂ ತಂದಿವೆ. ಆದರೂ ಹೊಸ ಸೇತುವೆ ನಿರ್ಮಾಣಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅರಕಲಗೂಡು ತಾಲ್ಲೂಕು ಅಣ್ಣಿಗನಹಳ್ಳಿ ಕಡವಿನಲ್ಲಿ ಹಾಸನ ಅರಕಲಗೂಡು ನಡುವೆ ಹೇಮಾವತಿ ನದಿಗೆ ಸಂಪರ್ಕ ಸೇತುವೆ ನಿರ್ಮಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಇಲ್ಲಿ ಸೇತುವೆ ನಿರ್ಮಾಣಗೊಂಡರೆ ಸುಮಾರು 20 ಕ್ಕೂ ಹೆಚ್ಚು ಗ್ರಾಮಗಳ ಜನತೆಗೆ  ಅನುಕೂಲವಾಗಲಿದೆ ಈ ಎರಡೂ ಬೇಡಿಕೆಗಳ ಬಗ್ಗೆ ತಿಂಗಳಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ರೈತ ಸಂಘದ ಮುಖಂಡರಾದ ಲಕ್ಷ್ಮಿನಾರಾಯಣ, ಹೊ.ತಿ. ಹುಚ್ಚಪ್ಪ, ನಂಜುಂಡೇಗೌಡ, ಪರಮೇಶ್ವರಪ್ಪ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT