ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಪಾರ ಪ್ರಮಾಣ ಮಳೆಯಿಂದಾಗಿ ಸುಮಾರು 3,168 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಹೇಳಿದರು.
ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ರೂ. 22 ಕೋಟಿ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 3,371 ಮನೆಗಳಿಗೆ ಹಾನಿಯಾಗಿದೆ. 159 ಮನೆಗಳು ಸಂಪೂರ್ಣವಾಗಿ ಬಿದ್ದಿವೆ. 3,168 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 67.70 ಕಿ.ಮೀ, ರಸ್ತೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ನ 464.05 ಕಿ.ಮೀ. ರಸ್ತೆ ಹಾನಿಯಾಗಿದೆ. ಲೋಕೋಪಯೋಗಿ ಇಲಾಖೆಯ 37, ಜಿಲ್ಲಾ ಪಂಚಾಯಿತಿ ವ್ಯಾಪ್ತಿ 59 ಸೇತುವೆ ಹಾಗೂ 3 ಇತರ ಸೇತುವೆ ಹಾನಿಯಾಗಿವೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 5 ಕೆರೆ, ಸಣ್ಣ ನೀರಾವರಿ ಇಲಾಖೆಯ 6 ಕೆರೆ ಹಾಗೂ 1 ಏತ ನೀರಾವರಿ ಯೋಜನೆಗೆ ಹಾನಿಯಾಗಿದೆ. 12 ಜಾನುವಾರುಗಳು ಮೃತಪಟ್ಟಿವೆ ಎಂದು ಹೇಳಿದರು.
ಯಾದಗಿರಿ ತಾಲ್ಲೂಕಿನಲ್ಲಿ ರೂ. 7.50 ಕೋಟಿ, ಶಹಾಪುರ ತಾಲ್ಲೂಕಿನಲ್ಲಿ ರೂ. 4.11 ಕೋಟಿ, ಹಾಗೂ ಸುರಪುರ ತಾಲ್ಲೂಕಿನಲ್ಲಿ ರೂ. 10.60 ಕೋಟಿ ಸೇರಿದಂತೆ ಜಿಲ್ಲೆಯಲ್ಲಿ ರೂ.22 ಕೋಟಿಯಷ್ಟು ಹಾನಿಯನ್ನು ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬೆಳೆ ಹಾನಿ ಕುರಿತು ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆಯನ್ನು ನಡೆಸಿದ್ದಾರೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಸಂತ್ರಸ್ತರಿಗೆ ನೆರವು ನೀಡಲು ಈಗಾಗಲೇ ರೂ. 5 ಕೋಟಿ ಬಿಡುಗಡೆ ಮಾಡಲಾಗಿದೆ. ಇನ್ನೂ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಅತಿವೃಷ್ಟಿಯಿಂದ ಹಾನಿಗೆ ಒಳಗಾದವರ ನೆರವಿಗೆ ಧಾಮಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅರ್ಹರಿಗೆ ಪರಿಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮಳೆಯಿಂದ ಹಾನಿಗೆ ಒಳಗಾದವರ ನೆರವಿಗೆ ಸರ್ಕಾರ ಬದ್ಧವಾಗಿದ್ದು, ರೈತರು, ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಅಗತ್ಯ ಸೌಲಭ್ಯಗಳನ್ನು ಸಂತ್ರಸ್ತರ ಮನೆ ಬಾಗಿಲಿಗೆ ಒದಗಿಸಲಾಗುವುದು ಎಂದು ತಿಳಿಸಿದರು.
ಇಬ್ಬರ ವಿರುದ್ಧವೂ ತನಿಖೆ: ಅಬಕಾರಿ ಸನ್ನದು ನವೀಕರಣ ಪ್ರಕರಣದಲ್ಲಿ ಉದ್ಭವಿಸಿರುವ ಗೊಂದಲಗಳ ನಿವಾರಣೆಗಾಗಿ ಇಬ್ಬರೂ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಸಚಿವ ಬಾಬುರಾವ ಚಿಂಚನಸೂರ ಹೇಳಿದರು.
ಬಾರ್ ಮತ್ತು ಮದ್ಯದಂಗಡಿಗಳ ಲೈಸನ್ಸ್ ನವೀಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಪಡೆಯಲು ಅಬಕಾರಿ ಉಪ ಆಯುಕ್ತ ಎಸ್.ಕೆ. ಕುಮಾರ ಮತ್ತು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಅಬಕಾರಿ ಉಪ ಆಯುಕ್ತರು, ಜಿಲ್ಲಾಧಿಕಾರಿಗಳ ಸಹಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಜಿಲ್ಲಾಧಿಕಾರಿಗಳು ರೂ. 10 ಲಕ್ಷ ಲಂಚ ಕೇಳಿದ್ದಾರೆ ಎಂದು ಉಪ ಆಯುಕ್ತರು ಮಾಧ್ಯಮಗಳ ಮೂಲಕ ಆರೋಪ ಮಾಡಿದ್ದು ತಿಳಿದು ಬಂದಿದೆ. ಈ ಬಗ್ಗೆಯೂ ಕೂಡ ಸಮಗ್ರ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.