ರಾಣೆಬೆನ್ನೂರು: ‘ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಅವರು ಕೇಂದ್ರದ ಯುಪಿಎ ಸರ್ಕಾರದಿಂದ ಲಾಭ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಕುರಿತು ಇಲ್ಲ ಸಲ್ಲದ ಟೀಕೆಗಳಲ್ಲಿ ತೊಡಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಟೀಕಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಅನಂತಮೂರ್ತಿ ಅವರಿಗೆ ದೇವರು ಇನ್ನೂ ಹೆಚ್ಚಿನ ಆಯುಷ್ಯವನ್ನು ಕೊಡಬೇಕು. ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಆಗುವುದನ್ನು ಅನಂತಮೂರ್ತಿ ಕಣ್ತುಂಬಿಕೊಳ್ಳುತ್ತಾರೆ’ ಎಂದು ಹೇಳಿದರು.
‘ಲೋಕಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳು ಆರಂಭವಾಗಿವೆ. ಪಿತೃಪಕ್ಷ ಕಳೆದ ಕೂಡಲೇ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗುವುದು. ದೇಶದಾದ್ಯಂತ ನರೇಂದ್ರ ಮೋದಿ ಅವರ ಗುಜರಾತ್ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಅಭಿಯಾನ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದರು. ‘ಮಾಜಿ ಸಿಎಂ ಬಿ.ಎಸ್.ಯಡಿಯೂಪ್ಪ ಪಕ್ಷ ಸೆರ್ಪಡೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗಲು ಕಾಂಗ್ರೆಸ್ ಹೊರತುಪಡಿಸಿ ಯಾವುದೇ ಪಕ್ಷ ಬೆಂಬಲ ನೀಡಲು ಮುಂದೆ ಬಂದರೂ ಸ್ವಾಗತಿಸುತ್ತೇವೆ’ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈವರೆಗೂ ವರ್ಗಾವಣೆ ದಂಧೆ ನಿಲ್ಲಿಸಿಲ್ಲ. ವರ್ಗಾವಣೆ ನಿಲ್ಲದ ಹೊರತು ಆಡಳಿತ ಸುಗಮವಾಗಿ ಸಾಧ್ಯವಿಲ್ಲ ಎಂದ ಜೋಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಕುರಿತು ಕೀಳುಮಟ್ಟದ ಟೀಕೆ ಮಾಡುತ್ತಿದ್ದಾರೆ. ಅವರ ವ್ಯಕ್ತಿತ್ವಕ್ಕೆ ಇದು ಸರಿಯಲ್ಲ. ಸಿದ್ದರಾಮಯ್ಯ ಅವರಿಗೆ ಸಭ್ಯತೆ ಇದ್ದರೆ ಕ್ಷೇಮೆ ಕೇಳಬೇಕು’ ಎಂದು ಒತ್ತಾಯಿಸಿದರು.
ವಿಧಾನಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ನಿಯೋಜಿತ ಜಿಲ್ಲಾ ಘಟಕದ ಅಧ್ಯಕ್ಷ ಭೋಜರಾಜ ಕರೂದಿ, ಭಾರತಿ ಜಂಬಿಗಿ, ಮಂಜುನಾಥ ಓಲೇಕಾರ ಅವರು ಹಾಜರಿದ್ದರು.