ಬೆಂಗಳೂರು: ಸರ್ಕಾರ ಅಸ್ತಿತ್ವಕ್ಕೆ ಬಂದ ನಾಲ್ಕೇ ತಿಂಗಳ ಅವಧಿಯಲ್ಲಿ ಸಚಿವರ ಮೌಲ್ಯಮಾಪನ ನಡೆಸಿದರೆ ನಿಖರ ಫಲಿತಾಂಶ ದೊರೆಯುವ ಸಾಧ್ಯತೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿಯವರ ನಿವಾಸಕ್ಕೆ ಸೋಮವಾರ ರಾತ್ರಿ ಭೇಟಿನೀಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಕೆಲಕಾಲ ಮುಖ್ಯಮಂತ್ರಿಯವರ ಜೊತೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ‘ಮೌಲ್ಯಮಾಪನದ ದೃಷ್ಟಿಯಿಂದ ನಾಲ್ಕು ತಿಂಗಳ ಅವಧಿ ತೀರಾ ಕಡಿಮೆ ಎನಿಸುತ್ತದೆ’ ಎಂದರು.
ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಪರಮೇಶ್ವರ್, ‘ಸಚಿವರ ಮೌಲ್ಯಮಾಪನ ನಡೆಸುವುದು ಎಐಸಿಸಿ ವರಿಷ್ಠರ ತೀರ್ಮಾನ. ಅದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇನೆ. ಪಕ್ಷದ ವರಿಷ್ಠರು ನೀಡುವ ಸೂಚನೆಗಳನ್ನು ಮುಖ್ಯಮಂತ್ರಿ ಮತ್ತು ಸಚಿವರಿಗೆ ತಿಳಿಸುವುದು ನನ್ನ ಕರ್ತವ್ಯ’ ಎಂದು ಪ್ರತಿಕ್ರಿಯಿಸಿದರು. ಇದೇ ವೇಳೆ ಕೇಂದ್ರ ಭೂ ಸಾರಿಗೆ ಆಸ್ಕರ್ ಫರ್ನಾಂಡಿಸ್ ಅವರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದರು.