ಯಾದಗಿರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಹೊಸ ಕಾಮಗಾರಿಗಳನ್ನು ಸೇರ್ಪಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈಗಾಗಲೇ 16 ಕಾಮಗಾರಿಗಳಿದ್ದು, ಈಗ ಹೆಚ್ಚುವರಿಯಾಗಿ 5 ಕಾಮಗಾರಿಗಳಾದ ಭೂ ಸಮತಟ್ಟು ಮಾಡುವುದು,
ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು, ನಮ್ಮ ಹೊಲ ನಮ್ಮ ದಾರಿ, ರಾಶಿ ಕಣಗಳ ನಿರ್ಮಾಣ, ಹಾಗೂ ತೋಟಗಾರಿಕೆ ಗಿಡ ನೆಡುವ ಕಾಮಗಾರಿಗಳನ್ನು ಅಳವಡಿಸಲಾಗಿದೆ ಎಂದರು.
ಜಿಲ್ಲೆಯ 1,56,180 ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ 73,000 ಮಧ್ಯಮ ವರ್ಗದ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ಅರ್ಹ ವೈಯಕ್ತಿಕ ಫಲಾನುಭವಿಗಳು ಸೇರಿದಂತೆ ಒಟ್ಟು 2.23 ಲಕ್ಷ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ಸೆ. 26 ರಿಂದ 29ರವರೆಗೆ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಯೋಜನೆ ಅನುಷ್ಠಾನಾಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು, ಹೊಸ ಕಾಮಗಾರಿಗಳ ಸೇರ್ಪಡೆಯ ಕುರಿತು ಡಂಗುರದ ಮೂಲಕ ಆಯಾ ಗ್ರಾಮಗಳಲ್ಲಿ ಅರಿವು ಮೂಡಿಸಲು ಸೂಚಿಸಲಾಗಿದೆ. ವಿಶೇಷ ಗ್ರಾಮಸಭೆಗಳಲ್ಲಿ ವೈಯಕ್ತಿಕ ಫಲಾನುಭವಿಗಳನ್ನು ಆಯ್ಕೆ ಮಾಡಿ ಈ ಯೋಜನೆ ಅಡಿಯಲ್ಲಿ ಕಾಮಗಾರಿ-ಗಳನ್ನು ಹಂಚಿಕೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಮಟ್ಟದ ಅಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಈ ಯೋಜನೆಗಳ ಮೇಲ್ವಿಚಾರಣೆ ಮಾಡಲು ಆದೇಶ ನೀಡಲಾಗಿದೆ. ಈ ಎಲ್ಲಾ ಅಧಿಕಾರಿಗಳು ಪ್ರತಿ ಶನಿವಾರ ಪ್ರಗತಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆಗಳ ಪುನಶ್ಚೇತನಕ್ಕಾಗಿ ರೂ. 10 ಲಕ್ಷ, ಕೋಳಿ ಸಾಕಾಣಿಕೆ ಕೊಟ್ಟಿಗೆ ನಿರ್ಮಾಣಕ್ಕಾಗಿ ರೂ. 35 ಸಾವಿರ, ಹಾಗೂ ಪಶುಗಳ ಕೊಟ್ಟಿಗೆ ನಿರ್ಮಾಣಕ್ಕಾಗಿ ರೂ. 48 ಸಾವಿರ ಅನುದಾನ ಒದಗಿಸುವ ಯೋಜನೆಗಳು ಲಭ್ಯವಿದ್ದು, ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಯೋಜನೆ ತರುವ ಕಾರ್ಯ ಸರ್ಕಾರ ಮಾಡಿದೆ. ಫಲಾನುಭವಿಗಳು ಇವುಗಳ ಲಾಭ ಪಡೆಯಬೇಕು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.