ಚಿಂತಾಮಣಿ: ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ, ವಸತಿಯೊಂದಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಹೇಳಿದರು.
ತಾ.ಪಂ.ನಲ್ಲಿ ಈಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಹಾಸ್ಟೆಲ್ಗಳಲ್ಲಿ ಆಹಾರ, ವಸತಿ ನೀಡುವುದಷ್ಟೇ ಜವಾಬ್ದಾರಿ ಎಂಬ ಕಲ್ಪನೆ ಅಧಿಕಾರಿಗಳಲ್ಲಿದೆ. ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಶಾಲೆಗಳ ಮುಖ್ಯ ಶಿಕ್ಷಕರನ್ನು ಭೇಟಿ ಮಾಡಿ ವಿದ್ಯಾರ್ಥಿಗಳ ಪ್ರಗತಿ ಪರಿಶೀಲನೆ ಮಾಡಬೇಕು, ಪೋಷಕರ ಗಮನಕ್ಕೂ ತರಬೇಕು ಎಂದರು.
ವಿದ್ಯಾರ್ಥಿಗಳು ಪ್ರತಿವಾರ ಊರುಗಳಿಗೆ ಹೋಗುವ ಪರಿಪಾಠವನ್ನು ನಿಲ್ಲಿಸಬೇಕು. ಕೆಲವು ಕಡೆ ಮೇಲ್ವಿಚಾರಕರೇ ಸೂಚನೆ ನೀಡಿ ಊರುಗಳಿಗೆ ಕಳುಹಿಸುತ್ತಾರೆ ಎಂಬ ಆರೋಪವಿದೆ ಎಂದು ಕಾರ್ಯ ನಿರ್ವಹಣಾಧಿಕಾರಿ ಬಿ.ಸಿ.ವಸಂತಕುಮಾರ್ ಹೇಳಿದರು.
ತಾಲ್ಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚುವರಿಯಾಗಿರುವ ಅಡಿಗೆಯವರನ್ನು ಎಲ್ಲಿ ಕೊರತೆ ಇದೆಯೋ ಅಲ್ಲಿಗೆ ನಿಯೋಜನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳಿಗೆ ಅನೀರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ಕ್ರೀಡಾ ಸಾಮಗ್ರಿಗಳು ಸೇರಿದಂತೆ ಮೂಲ ಸೌಲಭ್ಯ ಒದಗಿಸಿದರೆ ಮಕ್ಕಳು ವಿದ್ಯಾರ್ಥಿ ನಿಲಯಗಳಲ್ಲಿ ಉಳಿಯುತ್ತಾರೆ ಎಂದರು.
ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹಮದ್ ಸಫೀರ್, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಖಾಜಿ ಉಪಸ್ಥಿತರಿದ್ದರು.