ರಾಯಚೂರು: ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆ ಅಡಿ ರಾಷ್ಟ್ರೀಯ ಕೆಲಸ ಕೇಳುವ ಅಭಿಯಾನ (ಕಾಮ್ ಮಾಂಗೋ) ಆಯೋಜಿಸಿದೆ. ಈ ಅಭಿಯಾನ ಜಾಗೃತಿಯಿಂದ ಗ್ರಾಮೀಣ ಪ್ರದೇಶದ ಜನತೆಗೆ ಕೆಲಸ ದೊರಕಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ ಲಿಂಗರಾಜು ಹೇಳಿದರು.
ಗುರುವಾರ ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮದಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಕೆಲಸ ಕೇಳುವ ಅಭಿಯಾನ( ಕಾಮ್ ಮಾಂಗೋ) ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಸಿಯುತ್ತಿರುವ ಕೆಲಸದ ಬೇಡಿಕೆಯನ್ನು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಈ ಅಭಿಯಾನ ಆಯೋಜಿಸಲಾಗಿದೆ. ಗ್ರಾಮೀಣ ಜನ ಕೆಲಸಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದು ತಪ್ಪಬೇಕು. ಸ್ವಗ್ರಾಮದಲ್ಲಿ ಕೆಲಸ ಪಡೆದು ಆರ್ಥಿಕವಾಗಿ ಏಳ್ಗೆ ಹೊಂದಬೇಕು ಎಂಬ ಆಶಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮುದ್ದುಮೋಹನ್ ಮಾತನಾಡಿ, ಈ ಕೆಲಸ ಕೇಳುವ ಅಭಿಯಾನ ದೇಶದ ಉತ್ತರ ಭಾರತದ ಕೆಲ ಜಿಲ್ಲೆಗಳಲ್ಲಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದ ರಾಯಚೂರು ಜಿಲ್ಲೆ ಆಯ್ದುಕೊಳ್ಳಲಾಗಿದೆ. ಜನವರಿ 5ರವರೆಗೆ ಈ ಅಭಿಯಾನ ಜಿಲ್ಲೆಯಲ್ಲಿ ನಡೆಯಲಿದೆ. ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಬೇಡಿಕೆ ಹೆಚ್ಚಿಸುವುದು, ಈ ಯೋಜನೆಯಡಿ ಕೆಲಸ ಸಿಗುತ್ತದೆ ಎಂಬುದು ಗೊತ್ತಿಲ್ಲದಂಥ ಜನತೆಗೆ ಮನವರಿಕೆ ಮಾಡಿಕೊಡುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ ಶರಣಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ ನಾಗೇಂದ್ರಪ್ಪ ಮಟಮಾರಿ, ಮಟಮಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ. ಪದ್ಮಾವತಿ ನಾಗೇಶ ನಾಯಕ, ಮಟಮಾರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಣ್ಣ ತಿಕ್ಕಯ್ಯ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಡಾ.ಟಿ ರೋಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಂ. ಬಸಣ್ಣ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷೆ ಸುಲೋಚನಮ್ಮ ಅತಿಥಿಗಳಾಗಿ ಪಾಲ್ಗೊಂಡಿದ್ದರು.