ಯಾದಗಿರಿ: ಗ್ರಾಮೀಣ ಭಾಗದ ಮಕ್ಕಳಲ್ಲಿ ಪ್ರತಿಭೆ ಇದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಸಿಗಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ರಾಠೋಡ್ ಹೇಳಿದರು.
ಶುಕ್ರವಾರ ತಾಲ್ಲೂಕಿನ ಅಲ್ಲಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ವ ಶಿಕ್ಷಣ ಅಭಿಯಾನ ಮತ್ತು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣಿತ ಮೇಳದ ಸಮಾರಂಭ ಅವರು ಮಾತನಾಡಿದರು.
ಶಿಕ್ಷಕರ ಮಾರ್ಗದರ್ಶನವಿದ್ದರೆ, ಗ್ರಾಮೀಣ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಸಾಧನೆ ಮಾಡಬಹುದು ಎಂಬುದಕ್ಕೆ ಅನೇಕ ಉದಾಹರಣೆಗಳಿವೆ. ಅಲ್ಲಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ರಚನಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮಕ್ಕಳನ್ನು ಅಧ್ಯಯನದ ಕಡೆಗೆ ಕೊಂಡೊಯ್ಯುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ನಮ್ಮ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳು ಕಬ್ಬಿಣದ ಕಡಲೆಯಂತೆ. ಅದನ್ನು ಮನಗಂಡು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಈ ವಿಷಯಗಳನ್ನು ಸಲೀಸಾಗಿ ಅಧ್ಯಯನ ಮಾಡುವಂತಾಗಿದೆ ಎಂದರು.
ಗ್ರಾಮೀಣ ಭಾಗದ ಮಕ್ಕಳು ಶೈಕ್ಷಣಿಕ ಮುಖ್ಯವಾಹಿನಿಗೆ ಬರಲು ಸರ್ವ ಶಿಕ್ಷಣ ಅಭಿಯಾನದ ಮೂಲಕ ನೂರಾರು ಯೋಜನೆಗಳನ್ನು ಜಾರಿಗೊಳಿಸುತ್ತದೆ. ಪಾಲಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಮೂಲಕ ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡಬೇಕಿದೆ ಎಂದರು.
ಶರಣಪ್ಪ ಸೋಮಣ್ಣೋರ ಮಾತನಾಡಿ, ಮಕ್ಕಳಿಗೆ ಪ್ರೋತ್ಸಾಹದ ಜೊತೆಯಲ್ಲಿ ಮಾರ್ಗದರ್ಶನ ಅವಶ್ಯಕವಾಗಿದೆ. ಹಲವು ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಪಡೆದಿರುವ ನಮ್ಮ ಮಕ್ಕಳಲ್ಲಿ ಅಗಾಧ ಪ್ರತಿಭೆ ಅಡಗಿದೆ. ಅಲ್ಲಿಪುರ ಪ್ರೌಢಶಾಲೆಯ ಆವರಣ ಗೋಡೆಯ ನಿರ್ಮಾಣಕ್ಕಾಗಿ ಈಗಾಗಲೇ ಜಿಲ್ಲಾ ಪಂಚಾಯಿತಿ ವತಿಯಿಂದ ರೂ. 2 ಲಕ್ಷ ಅನುದಾನ ನೀಡಲಾಗಿದೆ. ಇನ್ನೂ ರೂ. 4 ಲಕ್ಷ ಒದಗಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.
ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾರಾಣಿ, ಮಕ್ಕಳಲ್ಲಿನ ಸರ್ವತೋಮುಖ ವ್ಯಕ್ತಿತ್ವ ವಿಕಾಸಕ್ಕೆ ಶಿಕ್ಷಕರ ಪಾತ್ರ ಅಪಾರವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಕೆಜೆಪಿ ಮುಖಂಡ ಸುರೇಶ ಅಲ್ಲಿಪುರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುನಾಥ ರಾಠೋಡ್, ಸದಸ್ಯ ಗೋಪಾಲ ಚವ್ಹಾಣ, ಎಸ್ಡಿಎಂಸಿ ಅಧ್ಯಕ್ಷ ಹಂಪಯ್ಯ, ಮುಖ್ಯಾಧ್ಯಾಪಕ ಲಕ್ಷ್ಮಾರೆಡ್ಡಿ, ಅಜೀಂ ಪ್ರೇಮ್ಜಿ ಫೌಂಡೇಶನ್ನ ಶಿವಕುಮಾರ, ರುದ್ರೇಶ, ಅಕ್ಕಮಹಾದೇವಿ, ಸುಭಾಷ ಗುತ್ತೇದಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.