ಬಳ್ಳಾರಿ: ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ನರೇಂದ್ರ ಮೋದಿ ಅವರಂತಹ ನಾಯಕನ ಅಗತ್ಯವಿದೆ. ಪಕ್ಷವು ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದು ‘ಕಾಂಗ್ರೆಸ್ಮುಕ್ತ’ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ತಿಳಿಸಿದರು.
ಆರ್ಎಸ್ಎಸ್ ಬೈಠಕ್ನಲ್ಲಿ ಪಾಲ್ಗೊಂಡಿರುವ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುಜರಾತ್, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲದೆ ಕರ್ನಾಟಕದಲ್ಲೂ ಮೋದಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಲೋಕಸಭೆ ಚುನಾವಣೆಗಿಂತ ಈ ಬಾರಿ ಬಿಜೆಪಿ ಇನ್ನೂ ಹೆಚ್ಚು ಸ್ಥಾನಗಳನ್ನು ಗಳಿಸುವುದು ಖಚಿತ.
ಮುಂಬರುವ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷವು ರಾಜ್ಯದಾದ್ಯಂತ ಸಿದ್ಧತೆ ನಡೆಸಿದ್ದು, ಇದೇ 25ರ ನಂತರ ಎಲ್ಲ 28 ಕ್ಷೇತ್ರಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಮುಖಂಡರು ಸಮಾವೇಶ ಹಮ್ಮಿಕೊಳ್ಳಲಿದ್ದಾರೆ ಎಂದರು. ಒಂದು ವಾರದೊಳಗೆ ಪಕ್ಷದ ಸಮನ್ವಯ ಸಮಿತಿ ಸಭೆ ಕರೆದು ರಾಜ್ಯದ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯ ಚಾಲನೆ ನೀಡಲಾಗುವುದು. ಈ ವಾರದಲ್ಲೇ ಆಯಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ ಮಾಡಿ ಚುನಾವಣಾ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.
ಮೋದಿ ಅವರನ್ನು ಪಕ್ಷವು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ಬೆಂಬಲಿಸಿರುವ ಯಡಿಯೂರಪ್ಪ ಹೊಂದಾಣಿಕೆಗೆ ಸಿದ್ಧ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅವರನ್ನು ಪಕ್ಷಕ್ಕೆ ಕರೆ ತರುವ ವಿಷಯದಲ್ಲಿ ವರಿಷ್ಠರು ಆದಷ್ಟು ಬೇಗ ನಿರ್ಧಾರ ಕೈಕೊಳ್ಳಬೇಕು ಎಂದು ಮನವಿ ಮಾಡುವುದಾಗಿ ಈ ಸಂದಭರ್ದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಅಕ್ರಮ ಗಣಿಗಾರಿಕೆ ಕುರಿತು ಈ ಹಿಂದೆ ಆರೋಪ ಮಾಡಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ವರದಿ ಅನುಷ್ಠಾನಕ್ಕೆ ಮುಂದಾಗುತ್ತಿಲ್ಲ. ರದ್ದಾಗಿರುವ ‘ಸಿ’ ಕೆಟಗರಿಯ 51 ಗಣಿಗಳಲ್ಲಿ ಬಹುತೇಕ ಗಣಿಗಳು ಕಾಂಗ್ರೆಸ್ ಮುಖಂಡರಿಗೆ ಸೇರಿವೆ. ಅಕ್ರಮದಲ್ಲಿ ಕಾಂಗ್ರೆಸ್ಸಿಗರೂ ಭಾಗಿಯಾಗಿರುವುದನ್ನು ಇದು ಸಾಬೀತುಪಡಿಸಿದೆ. ಅಕ್ರಮ ಗಣಿಗಾರಿಕೆ ತನಿಖೆಯನ್ನು ಸರ್ಕಾರ ಶೀಘ್ರವೇ ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘ ಪರಿವಾರದ ಬೆಂಬಲ
ಸಭೆಯಲ್ಲಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ‘ಮುಂಬರುವ ಲೋಕಸಭಾ ಚುನಾವಣೆಯನ್ನು ಸಂಘ ಪರಿವಾರದ ಎಲ್ಲ ಸಂಘಟನೆಗಳೂ ಸವಾಲಾಗಿ ಸ್ವೀಕರಿಸಿ, ಸಮನ್ವಯತೆ ಸಾಧಿಸಿ, ಒಗ್ಗಟ್ಟಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಸಲಹೆ ಮಾಡಿದರು’ ಎಂದು ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡರೊಬ್ಬರು ತಿಳಿಸಿದರು.
ಸಭೆಗೆ ಸುಮಾರು 150 ಮಂದಿಗೆ ಆಹ್ವಾನವಿತ್ತು. ಯಡಿಯೂರಪ್ಪ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ವಿಚಾರದ ಬಗ್ಗೆ ಚರ್ಚೆಯಾಗಿಲ್ಲ. 150 ಮಂದಿ ಸೇರುವ ಸಭೆಗಳಲ್ಲಿ ಇಂಥ ವಿಚಾರಗಳು ಚರ್ಚೆಗೆ ಬರುವುದಿಲ್ಲ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.