ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ (ಜೆಆರ್ಎಲ್) ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಜೆಆರ್ಎಲ್ ಜಾಲತಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರವಾಸೋದ್ಯಮವು ಹೆಚ್ಚಿನ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತದೆ. ಅಲ್ಲದೆ ರಾಜ್ಯದ ಬೊಕ್ಕಸಕ್ಕೆ ಆದಾಯವನ್ನೂ ತರುತ್ತದೆ. ಈಗ ಪ್ರಚಲಿತದಲ್ಲಿರುವ ಪರಿಸರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದರು.
ಜೆಆರ್ಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಅನೂರ್ ರೆಡ್ಡಿ, ‘ಪ್ರವಾಸಿಗರನ್ನು ಆಕರ್ಷಿಸುವಂತೆ ಹಾಗೂ ವೇಗದ ಜಗತ್ತಿಗೆ ಹೊಂದುವಂತೆ ಜಾಲತಾಣವನ್ನು ವಿಶೇಷವಾಗಿ ರೂಪಿಸಲಾಗಿದೆ. ಈ ಹಿಂದಿನ ಪ್ರವಾಸಿಗರು ರೂಪಿಸಿರುವ ಪ್ರವಾಸಿ ಚಲನಚಿತ್ರಗಳು ಜಾಲತಾಣದಲ್ಲಿ ಲಭ್ಯವಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಸಂಸ್ಥೆಯ ಚಟುವಟಿಕೆಗಳನ್ನು ವಿಸ್ತರಿಸಲಾಗುವುದು’ ಎಂದರು.
ಜೆಆರ್ಎಲ್ಗೆ ಪದೇ ಪದೇ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚಿನ ರಿಯಾಯಿತಿ ಒದಗಿಸುವ ‘ಜೆಆರ್ಎಲ್ ಲಾಯಲ್ಟಿ ಕಾರ್ಡ್’ಗಳನ್ನು ಸಮಾರಂಭದಲ್ಲಿ ವಿತರಿಸಲಾಯಿತು.
ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಶೈಲಂ, ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕೃಷ್ಣ ರಾವ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶಕ ಸಿ.ಡಿ.ದೇವಯ್ಯ ಉಪಸ್ಥಿತರಿದ್ದರು.
ಸಂಸ್ಥೆಯ ನೂತನ ಜಾಲತಾಣಗಳು : www.junglelodges.com ಮತ್ತು www.jrlexplore.com