ಶಿವಮೊಗ್ಗ: ಸಮಾಜವನ್ನು ಸಚ್ಛವಾಗಿಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಾಗರಿಕರ ಜವಾಬ್ದಾರಿ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೌರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನರಲ್ಲಿ ಇದು ನಮ್ಮ ರಸ್ತೆ, ನಮ್ಮ ಹಳ್ಳಿ, ನಮ್ಮ ಊರು; ಇದನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂಬ ಭಾವನೆಯೇ ಇಲ್ಲ. ಜತೆಗೆ ಸಮಾಜವನ್ನು ಸ್ವಚ್ಛವಾಗಿಡುವವರ ಅರೋಗ್ಯದ ಬಗ್ಗೆ ಕಾಳಜಿಯೂ ಸಮಾಜದಲ್ಲಿ ಇಲ್ಲದಿರುವುದು ದುರದೃಷ್ಟಕರ ಎಂದು ವಿಷಾದಿಸಿದ ಅವರು, ಪೌರಕಾರ್ಮಿಕರಿಗೆ ಕೇವಲ ಸಂಬಳ, ಸಾರಿಗೆ ಭತ್ಯೆ ನೀಡಿದರೆ ಸಾಲದು; ಅವರ ಆರೋಗ್ಯದ ಬಗ್ಗೆ ಚಿಂತಿಸಬೇಕು ಎಂದು ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಮಾತನಾಡಿ, ಪೌರ ಕಾರ್ಮಿಕರ ಬೇಡಿಕೆ ಈಡೇರಿಸಿ, ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಜನಪ್ರತಿನಿಧಿಗಳು ಪ್ರಯತ್ನಿಸಿದರೆ ಸಾಲದು; ವ್ಯವಸ್ಥಿತವಾಗಿ ಕಸ, ತ್ಯಾಜ್ಯ ವಿಲೇವಾರಿ ಬಗ್ಗೆ ನಾಗರಿಕರೂ ಪ್ರಯತ್ನ ಮಾಡಬೇಕು ಎಂದರು.
ತದನಂತರ ಉತ್ತಮ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ, ಶಾಸಕ ಕೆ.ಬಿ.ಪ್ರಸನ್ನಕುಮಾರ್, ವಿಧಾನ ಪರಿಷತ್ತು ಸದಸ್ಯ ಆರ್.ಕೆ.ಸಿದ್ದರಾಮಣ್ಣ, ನಗರಸಭೆ ಉಪಾಧ್ಯಕ್ಷೆ ರೇಖಾ ಚಂದ್ರಶೇಖರ್, ಆಯುಕ್ತ ಕರಭೀಮಣ್ಣನವರ್,
ಪೌರಸೇವಾ ನೌಕರರ ಸಂಘದ ಪದಾಧಿಕಾರಿಗಳಾದ ಎನ್.ಗೋವಿಂದ, ಎಸ್.ರವಿಕುಮಾರ್, ಪಿ.ವೆಂಕಟೇಶ್, ಸುಭಾಷ್ ಮತ್ತಿತರರು ಉಪಸ್ಥಿತರಿದ್ದರು.