ಬೆಂಗಳೂರು: ‘ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ಕ್ರೀಡೆಯು ಮಹತ್ವವಾಗಿದೆ. ಆದ್ದರಿಂದ, ಮಕ್ಕಳಲ್ಲಿ ಅಡಗಿರುವ ಕ್ರೀಡಾ ಭಾವನೆಗೆ ಪ್ರೋತ್ಸಾಹ ನೀಡಬೇಕು’ ಎಂದು ವಿಧಾನ ಪರಿಷತ್ ಶಾಸಕ ರಾಮಚಂದ್ರಗೌಡ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಜಿಲ್ಲಾ ಮಟ್ಟದ ದಸರಾ ಮಹಿಳಾ ಮತ್ತು ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
‘ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸ್ವಾಭಿಮಾನ ಬೆಳೆಯುವ ಜತೆಗೆ ಭೌತಿಕವಾಗಿ, ಮಾನಸಿಕವಾಗಿ ಬೆಳೆಯಬಹುದು. ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಸಹಜ’ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ತಿರುವರಂಗ ವಿ.ನಾರಾಯಣಸ್ವಾಮಿ ಮಾತನಾಡಿ, ‘ಸರ್ಕಾರ ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಶಿಕ್ಷಣ, ಉದ್ಯೋಗದಲ್ಲಿ ಪ್ರತ್ಯೇಕ ಮೀಸಲಾತಿ ಇಟ್ಟಿದೆ. ನಮ್ಮ ಕ್ರೀಡಾಪಟುಗಳು ಅದನ್ನು ಸದುಪಯೋಗಪಡಿಸಿಕೊಂಡು, ಸ್ಫರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಬೇಕು’ ಎಂದರು.