ಹೊಸನಗರ: ಮಕ್ಕಳ ಪ್ರತಿಭಾ ಮಾಪನದಲ್ಲಿ ತಾರತಮ್ಯ ಬೇಡ. ಗುಣಮಟ್ಟ ಹಾಗೂ ಅರ್ಹತೆಯೇ ಮಾನದಂಡ ಆಗಿರಲಿ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಜ್ಯೋತಿ ಚಂದ್ರಮೌಳಿ ಅಭಿಪ್ರಾಯಪಟ್ಟರು.
ಮಂಗಳವಾರ ಪಟ್ಟಣದ ರಾಮಕೃಷ್ಣ ವಿದ್ಯಾಯಲಯದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ‘ಮಕ್ಕಳ ಹಬ್ಬ’ವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನ ಕುಗ್ರಾಮದ ಸರ್ಕಾರಿ ಶಾಲಾ ಮಕ್ಕಳು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡು ವಿಜೇತ ರಾಗಿರುವುದು ಅತ್ಯಂತ ಶ್ಲಾಘನೀಯ ಸಂಗತಿ ಎಂದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನಾ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಗೀತಾ ನಿಂಗಪ್ಪ, ತಹಶೀಲ್ದಾರ್ ಚಿದಂಬರ ಕುಲಕರ್ಣಿ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ ವಿ. ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಚಂದ್ರಪ್ಪ, ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಸಂಘದ ಅಧ್ಯಕ್ಷ ರೇಣುಕಪ್ಪ, ಕಾರ್ಯದರ್ಶಿ ಬಸವಣ್ಯಪ್ಪ, ತಾಲ್ಲೂಕು ದೈಹಿಕ ಪರಿವೀಕ್ಷಕ ಈಶ್ವರಪ್ಪ, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾನಾಯ್ಕ್, ಕಾರ್ಯದರ್ಶಿ ದುಗ್ಗಪ್ಪ ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ದೇವರಾಜ್ ಸ್ವಾಗತಿಸಿದರು. ಸುಧಾಕರ್ ಶಂಕರ ಭಟ್ ನಿರೂಪಿಸಿದರು. ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ದೇವಾನಂದ್ ವಂದಿಸಿದರು.