ನವದೆಹಲಿ (ಪಿಟಿಐ): ‘ಮರ್ಯಾದೆಗೇಡಿ ಹತ್ಯೆ’ಯಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು ಎಂದಿರುವ ಕೇಂದ್ರದ ಸಾಮಾಜಿಕ ನ್ಯಾಯ ಸಚಿವೆ ಕುಮಾರಿ ಶೆಲ್ಜಾ ಇಂತಹ ಹತ್ಯೆಗಳನ್ನು ನಡೆಸುವವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದರು.
ಹರಿಯಾಣದ ರೋಹ್ಟಕ್ ಜಿಲ್ಲೆಯ ಘರ್ನವತಿ ಗ್ರಾಮದಲ್ಲಿ ಬುಧವಾರ ಸಂಜೆ ಮಗಳು ಒಪ್ಪಿದ ಯುವಕನ ಜೊತೆ ಮದುವೆ ಮಾಡಲು ನಿರಾಕರಿಸಿ ಮಗಳನ್ನು ಕೊಚ್ಚಿ ಕೊಲೆ ಮಾಡಿ, ಯುವಕನ ರುಂಡವನ್ನು ಚೆಂಡಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು.
ಇಂತಹ ಘಟನೆಗಳು ಇನ್ನಾವ ರಾಜ್ಯದಲ್ಲಿಯೂ ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಮಾಜದ ಪ್ರತಿಯೊಬ್ಬರು ಇದರ ವಿರುದ್ಧ ಧ್ವನಿ ಎತ್ತಬೇಕು ಎಂದರು.
ಪ್ರಸಕ್ತ ಘಟನೆಯಲ್ಲಿ ಕುಟುಂಬದವರ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಆದರೂ ನಾವು ಯಾವ ತಪ್ಪನ್ನೂ ಮಾಡಿಲ್ಲ ಎಂದು ಕುಟುಂಬದ ಸದಸ್ಯರು ನಟಿಸುತ್ತಿದ್ದಾರೆ ಎಂದರು.
ಮುಜಫ್ಫರ್ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಒತ್ತಡ ಹೇರುವಿರಾ ಎಂದು ಕೇಳಿದ ಪ್ರಶ್ನೆಗೆ ಈ ಕುರಿತು ಸಂಬಂಧಪಟ್ಟ ರಾಜ್ಯ ಸರ್ಕಾರ ನಿರ್ಧರಿಸಲಿದೆ ಎಂದರು.
ಈಗಾಗಲೇ ಉತ್ತರಪ್ರದೇಶ ಸರ್ಕಾರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಸಮುದಾಯಗಳೂ ಪರಸ್ಪರ ಸಹಕಾರದಿಂದ ಇದ್ದಲ್ಲಿ ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಬಹುದು ಎಂದರು.ಪಕ್ಷದ ಮುಖಂಡರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.