ಕೊಪ್ಪಳ: ಮಾನವಹಕ್ಕುಗಳು ಜ್ಯೋತಿಯಂತೆ ಪ್ರಕಾಶಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ ಚೆಗಾರೆಡ್ಡಿ ಹೇಳಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶ್ವ ಮಾನವಹಕ್ಕುಗಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ವಿಶ್ವಸಂಸ್ಥೆ ಘೋಷಿಸಿದ ಮಾನವ ಹಕ್ಕುಗಳ ಪರಿಕಲ್ಪನೆಯನ್ನು ಬಹುತೇಕ ರಾಷ್ಟ್ರಗಳ ಸಂವಿಧಾನಗಳು ಅಳವಡಿಸಿಕೊಂಡಿವೆ. ವ್ಯಕ್ತಿಯ ಬದುಕುವ ಹಕ್ಕು, ಶಿಕ್ಷಣ ಮೂಲಸೌಲಭ್ಯ ಪಡೆಯುವ ಅವಕಾಶವನ್ನು ಈ ವ್ಯವಸ್ಥೆ ಕಲ್ಪಿಸಿದೆ. ಒಟ್ಟಾರೆ ಈ ಹಕ್ಕುಗಳ ಸಮರ್ಪಕ ಜಾರಿಯಿಂದ ಮಾನವ ಕುಲಕ್ಕೆ ಒಳಿತಾಗಬೇಕು ಎಂದು ಆಶಿಸಿದರು.
ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ ಮಾತನಾಡಿ, 1948ರ ಡಿ.10ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿಶ್ವ ಮಾನವ ಹಕ್ಕುಗಳನ್ನು ಘೋಷಿಸಲಾಯಿತು. ಜಗತ್ತಿನ ಎಲ್ಲ ಸಂವಿಧಾನಗಳಲ್ಲಿ ಅದನ್ನು ಅಳವಡಿಸಿಕೊಂಡು ಪ್ರತಿಯೊಬ್ಬ ಪ್ರಜೆಯ ಹಕ್ಕುಗಳನ್ನು ಗೌರವಿಸಬೇಕು. ಸಾಮಾಜಿಕ ನ್ಯಾಯ ನೀಡಬೇಕು ಎಂದು ಹೇಳಲಾಯಿತು. ಆದರೆ, ಇಂದು ಜಗತ್ತಿನಾದ್ಯಂತ ಮಾನವ ಹಕ್ಕುಗಳು ವ್ಯಾಪಕವಾಗಿ ಉಲ್ಲಂಘನೆಯಾಗುತ್ತಿವೆ. ಕೊಲೆ, ಅತ್ಯಾಚಾರದಂಥ ಘಟನೆಗಳು ಹೆಚ್ಚುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಜಗತ್ತಿನಲ್ಲಿ ಮೊದಲ ಬಾರಿಗೆ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಲು ಬಸವಣ್ಣ ಪ್ರಯತ್ನಿಸಿದರು. ಮಹಾತ್ಮ ಗಾಂಧೀಜಿ, ನೆಲ್ಸನ್ ಮಂಡೇಲಾ, ಡಾ.ಬಿ.ಆರ್. ಅಂಬೇಡ್ಕರ್ ಅವರು ಮಾನವ ಹಕ್ಕುಗಳನ್ನು ಜಾರಿಗೊಳಿಸಲು ಮುಂದಾದ ಮಹನೀಯರು ಎಂದರು.
ರಾಜ್ಯ ನಿರ್ದೇಶಕ ತತ್ವಗಳಲ್ಲಿಯೂ ಮಾನವ ಹಕ್ಕುಗಳನ್ನು ಜಾರಿಗೊಳಿಸಬೇಕು.
ಇತ್ತೀಚೆಗೆ ಜಾರಿಯಾದ ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆ ಅದೂ ಕೂಡಾ ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ. ಮಾನವ ಹಕ್ಕುಗಳನ್ನು ಎತ್ತಿ ಹಿಡಿದ, ಈ ಕ್ಷೇತ್ರದಲ್ಲಿ ಶ್ರಮಿಸಿದವರಿಗೆ ನೋಬೆಲ್ ಪ್ರಶಸ್ತಿಯನ್ನೂ ನೀಡಲಾಗುತ್ತಿದೆ ಎಂದರು. ವಕೀಲರಾದ ಹನುಮಂತರಾವ್ ಮಾನವ ಹಕ್ಕುಗಳ ಕುರಿತು ಮಾತನಾಡಿದರು. ಸಾವಿತ್ರಿ ಗಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಚ್.ವೀರಣ್ಣ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.