ಬಳ್ಳಾರಿ: ವಿದೇಶದಲ್ಲಿನ ಉದ್ಯೋಗದ ಕನಸು ಕಾಣುವ ಮಕ್ಕಳು ವೃದ್ಧ ತಂದೆ-– ತಾಯಿಯರನ್ನು ಕಡೆಗಣಿಸುತ್ತಿರುವುದರಿಂದ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಉಜ್ಜಯಿನಿಯ ಜಗದ್ಗುರು ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಅಲ್ಲಿಪುರದ ಮಹಾದೇವತಾತ ಮಠದಲ್ಲಿ ಭಾನುವಾರ ಜರುಗಿದ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಏರ್ಪಡಿಸಿದ್ದ ವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸಿದೆ್ಧೇಶ್ವರ ಶಿಕ್ಷಕರ ಸಂಘದ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಿನಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗಲು ವಿದೇಶದಲ್ಲಿ ನೆಲೆಸಿರುವ ಮಕ್ಕಳೇ ಕಾರಣ. ಪಾಲಕರೂ ತಮ್ಮ ಮಕ್ಕಳು ವಿದೇಶದಲ್ಲಿ ಕೆಲಸ ಮಾಡಲಿ ಎಂಬ ಕನಸು ಕಾಣುತ್ತಿರುವುದರಿಂದ ಈ ಆತಂಕಕಾರಿ ಬೆಳವಣಿಗೆ ಕಂಡುಬಂದಿದೆ ಎಂದು ಅವರು ಹೇಳಿದರು. ಪ್ರಸ್ತುತ ದಿನಗಳಲ್ಲಿ ಹಣವೇ ಮುಖ್ಯವಾಗುತ್ತಿದೆಯೇ ವಿನಾ, ತಂದೆ– -ತಾಯಿ, ದೇಶ, ಭಾಷೆ, ನೆಲ, ಜಲ, ಸಂಸ್ಕೃತಿ ಮುಖ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದರು.
ಎಮ್ಮಿಗನೂರು ಹಂಪಿ ಸಾವಿರ ದೇವರ ಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಹರಗಿನದೋಣಿ ಮಠದ ಸಿದ್ಧಲಿಂಗ ಶಿವಾಚಾರ್ಯರು, ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ, ಶಿವಯೋಗಿ ಹಿರೇಮಠ ಮಾತನಾಡಿದರು.
ವೀ.ವಿ ಸಂಘದ ಉಪಾಧ್ಯಕ್ಷ ಕೆ.ಎಂ.ಮಹೇಶ್ವರಸ್ವಾಮಿ, ರಾಜ್ಯ ವೀರಶೈವ ಲಿಂಗಾಯಿತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಬಸವನಗೌಡ, ಸಿರಿಗೇರಿ ಪನ್ನರಾಜ್, ಎಸ್.ಎ. ಹುದ್ದಾರ, ಕೋಳೂರು ಪಾರ್ವತಮ್ಮ, ಪಿ.ಎಂ.ಶಿವಕುಮಾರ ಉಪಸ್ಥಿತರಿದ್ದರು. ಸಂಘದ ನೂತನ ಅಧ್ಯಕ್ಷರನ್ನಾಗಿ ರಾಜಶೇಖರ ಗಾಣಿಗರ ಅವರನ್ನು ಇದೇ ಸಂದರ್ಭ ಘೋಷಿಸಲಾಯಿತು.
ಆರ್ಎಚ್ಎಂ ಚನ್ನಬಸವಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಪ್ರೀತಿ ಇಟಗಿಮಠ್ ನೃತ್ಯ ಪ್ರದರ್ಶಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ನಿವೃತ್ತ ಸದಸ್ಯರನ್ನು ಸನ್ಮಾನಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.