ಸೋಮವಾರಪೇಟೆ: ವಿದ್ಯಾರ್ಥಿಗಳಲ್ಲಿ ಶಿಸ್ತು, ಜ್ಞಾನ ಮತ್ತು ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯೆಯನ್ನು ಹಣದಿಂದ ಅಳೆಯಬಾರದು. ಶಿಕ್ಷಕ, ವಿದ್ಯಾರ್ಥಿ ಹಾಗೂ ಪೋಷಕರ ನಡುವೆ ಸಮನ್ವಯತೆ ಇದ್ದರೆ ಮಾತ್ರ ಶಿಕ್ಷಣ ಸಂಸ್ಥೆಗಳ ಏಳಿಗೆ ಸಾಧ್ಯ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಲೀಲಾ ನಿರ್ವಾಣಿ ಉದ್ಘಾಟಿಸಿದರು. ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊರಗಪ್ಪ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಗಪ್ಪ, ಪ್ರಭಾರ ಪ್ರಾಂಶುಪಾಲ ಶಿವಣ್ಣ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ನಳಿನಿ ಗಣೇಶ್, ದಾನಿಗಳಾದ ಕಾಂತ್ರಾಜ್, ಹಾಲೆಬೇಲೂರು ನಿರ್ವಾಣ ಶೆಟ್ಟಿ, ಮಹೇಶ್ ತಿಮ್ಮಯ್ಯ, ವಕೀಲರಾದ ಗಿರೀಶ್, ಉಪ ಪ್ರಾಂಶುಪಾಲರಾದ ಲೀಲಾವತಿ ಇದ್ದರು.
ಪ್ರೌಢಶಾಲೆಯ 10ನೇ ತರಗತಿ ಮತ್ತು ಕಾಲೇಜಿನ ವಿಜ್ಞಾನ, ವಾಣಿಜ್ಯಶಾಸ್ತ್ರ ಮತ್ತು ಕಲಾ ವಿಭಾಗದಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಪ್ರದರ್ಶನ ನಡೆಯಿತು.