ಅಂಕೋಲಾ: ‘ಇತ್ತೀಚೆಗೆ ಎಲ್ಲ ಕ್ಷೇತ್ರದಲ್ಲಿಯೂ ಸ್ವಾರ್ಥಗಳೇ ತುಂಬಿಕೊಂಡು ನಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದ್ದಾರೆ. ಹೀಗಾಗಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ನೀಡಬೇಕಾದ ಅಗತ್ಯ ಇದೆ’ ಎಂದು ನಿವೃತ್ತ ನ್ಯಾಯಮೂರ್ತಿ ಡಾ. ಎಸ್.ಆರ್. ನಾಯಕ ಹೇಳಿದರು.
ಪಟ್ಟಣದ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ವಾಸುದೇವರಾವ ಕಸಬೇಕರ ಬಾಕಿಯರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಪಿಕಳೆ ದಂಪತಿ ಸ್ಥಾಪಿಸಿದ ವಾಸುದೇವರಾವ ಕಸಬೇಕರ ಬಾಕಿಯರ ಪ್ರೌಢಶಾಲೆಯು ಈಗ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಈ ಮೂಲಕ ಅದೆಷ್ಟೋ ಮಹಿಳೆಯರು ದೇಶ-ವಿದೇಶಗಳಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ’ ಎಂದು ಸಂಸ್ಥೆಯ ಸಾಧನೆಯನ್ನು ಸ್ಮರಿಸಿದರು.
ಸುವರ್ಣ ಮಹೋತ್ಸವದ ನಿಮಿತ್ತ ರಚಿಸಲಾದ ಸ್ಮರಣ ಸಂಚಿಕೆಯನ್ನು ಆಳ್ವಾಸ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ‘ವಿವಿಧ ಕಾರಣಗಳಿಂದಾಗಿ ನಮ್ಮ ಸಂಸ್ಕೃತಿ, ಕಲೆಯನ್ನು ಮರೆಯುತ್ತಿದ್ದೇವೆ. ಹೀಗಾಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಕೂಡ ದೇಶೀ ಕಲೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದರು.
ಶಾಲೆಯ ಹಳೆಯ ವಿದ್ಯಾರ್ಥಿನಿ ನಂದಿತಾ ಕಾಮತ, ಕೆ.ಎಲ್.ಇ. ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಮಾತನಾಡಿದರು. ಸ್ಥಳೀಯ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಡಿ.ಎಲ್. ಭಟ್ಕಳ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ನಾಗಮ್ಮಾ ಟಿ. ಆಗೇರ ವರದಿ ವಾಚಿಸಿದರು. ಶಿಕ್ಷಣ ಮಹಾವಿದ್ಯಾಲಯದ ಪ್ರಭಾರ ಪ್ರಾಚಾರ್ಯ ವಿನಾಯಕ ಜಿ. ಹೆಗಡೆ ಪರಿಚಯಿಸಿದರು. ಉಪನ್ಯಾಸಕ ಮಂಜುನಾಥ ಇಟಗಿ ಕಾರ್ಯಕ್ರಮ ನಿರ್ವಹಿಸಿದರು.