ಬೆಂಗಳೂರು: `ಸಮುದಾಯದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸಬೇಕು' ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು.
ಕುರುಬ ವಿಕಾಸ ಪ್ರತಿಷ್ಠಾನವು ಭಾನುವಾರ ನಗರದಲ್ಲಿ ಆಯೋಜಿಸಿದ್ದ `ಕಾಳಿದಾಸ ಜಯಂತಿ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳೆದ ನಾಲ್ಕು ದರ್ಶಕಗಳಿಗೆ ಹೋಲಿಸಿದರೆ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಪೋಷಕರು ಮಕ್ಕಳ ಸಾಧನೆಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಸೇವೆ ಸಲ್ಲಿಸಿದ ಕಾಳಿದಾಸರ ಜಯಂತಿಯನ್ನು ಬಹುತೇಕ ಎಲ್ಲರೂ ಮರೆತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅವರ ಸಾಹಿತ್ಯವನ್ನು ಸಮಾಜಕ್ಕೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಬಿ.ಕೆ.ರವಿ ಮಾತನಾಡಿ, ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಉತ್ತಮ ಕೆಲಸ. ವಿಶ್ವದ ಶ್ರೇಷ್ಠ ಕವಿಗಳಲ್ಲಿ ಕಾಳಿದಾಸ ಕೂಡ ಒಬ್ಬ. ಅವನ ಸಾಹಿತ್ಯದ ಕುರಿತು ಚಿಂತನೆಗಳು ನಡೆಯಬೇಕಾದ ಅಗತ್ಯವಿದೆ' ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು, ಪಿಎಚ್.ಡಿ ಪದವೀಧರರನ್ನು ಸನ್ಮಾನಿಸಲಾಯಿತು. ಕರ್ನಾಟಕ ಪ್ರದೇಶ ಕುರುಬರ ಸಂಘದ ಖಜಾಂಚಿ ಆರ್.ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.