ಚಿಕ್ಕಮಗಳೂರು: ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದ ಸಾರ್ವಜನಿಕರಿಗೆ ವಿದ್ಯುತ್ಚ್ಛಕ್ತಿ ಸರಬರಾಜಿನಲ್ಲಿ ಅಭಾವವಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದರು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಿರುವ ವಸತಿ ಯೋಜನೆಗಳಿಗೆ ಫಲಾನುಭವಿಗಳನ್ನು ಗ್ರಾಮಸಭೆಯಲ್ಲಿ ಆಯ್ಕೆಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.
ಸ್ವಸಹಾಯ ಸಂಘದ ಸದಸ್ಯರಿಗೆ ಸ್ಥಳೀಯವಾಗಿ ಸಿಗುವ ಕಚ್ಚಾವಸ್ತುಗಳನ್ನು ಉಪಯೋಗಿಸಿ ಸಿದ್ಧವಸ್ತುಗಳನ್ನು ತಯಾರಿಸಿ ಉದ್ಯೋಗ ಕೈಗೊಳ್ಳುವಂತೆ ತರಬೇತಿಗಳನ್ನು ನೀಡುವುದರೊಂದಿಗೆ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ನಮ್ಮ ಹೊಲ ನಮ್ಮ ದಾರಿ, ಒಕ್ಕಣಿಕೆ ಕಣ, ಕೆರೆ ಹೂಳು ಎತ್ತುವುದು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ಯೋಗ ಖಾತ್ರಿ ಯೋಜನೆಗೆ ಸದಸ್ಯರ ನೋಂದಣಿ ಹೆಚ್ಚಿಸಬೇಕೆಂದರು.
ವಿವಿಧ ನಿಗಮ ಮಂಡಳಿಯ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವ ಹಾಗೂ ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳು ತ್ವರಿತಗೊಳಿಸಬೇಕು. ಯಶಸ್ವಿನಿ ಯೋಜನೆಗೆ ಹೊಸ ಸದಸ್ಯರ ನೋಂದಣಿಗೆ ಗ್ರಾಮೀಣ ಭಾಗದಲ್ಲಿ ಯೋಜನೆಯ ಉಪಯೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಹೆಚ್ಚಿನ ನೋಂದಣಿ ಮಾಡುವುದರ ಮೂಲಕ ಕೃಷಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ಅಧ್ಯಕ್ಷರು ಕೃಷಿ ಅಧಿಕಾರಿಗಳಿಂದ ಮಳೆ, ಬೆಳೆ, ಗೊಬ್ಬರ ಹಾಗೂ ಬಿತ್ತನೆ ಬೀಜದ ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದರು. ರೈತರು ಬೆಳೆದಂತಹ ಉತ್ಪನ್ನಗಳನ್ನು ಬೀಜ ಸಂಸ್ಕರಣೆ ಘಟಕಗಳಿಗೆ ಮಾರಾಟ ಕಲ್ಪಿಸುವುದರಿಂದ ರೈತರಿಗೆ ಹೆಚ್ಚಿನ ಆದಾಯವಾಗುವಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಮಾಜಿಕ ಅರಣ್ಯ ಯೋಜನೆಯಡಿ ಫಲಾನುಭವಿಗಳನ್ನು ಗ್ರಾಮಸಭೆಯಲ್ಲಿ ಆಯ್ಕೆ ಮಾಡುವುದರೊಂದಿಗೆ ಅನುದಾನವನ್ನು ಸಮರ್ಪಕವಾಗಿ ನೀಡಿ ಅನುಷ್ಠಾನಗೊಳಿಸಬೇಕೆಂದ ಅವರು, ಯೊಜನೆಯ ಅನುಷ್ಠಾನದ ಬಗ್ಗೆ ಖುದ್ದು ಸಮೀಕ್ಷೆ ನಡೆಸುವುದಾಗಿ ತಿಳಿಸಿದರು.
ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಲ್.ವಿಠ್ಠಲ್ ಮಾತನಾಡಿ, ಗ್ರಾಮೀಣ ಸ್ವಸಹಾಯ ಸಂಘಗಳು ಕೈಗೊಳ್ಳುವ ಆದಾಯೋತ್ಪನ್ನ ಚಟುವಟಿಕೆಗಳಿಗೆ ಬೇಕಾದ ಕೌಶಲ್ಯ ತರಬೇತಿ ಹಾಗೂ ಬ್ಯಾಂಕ್ ಸಹಾಯಧನ ನೀಡಲು ಉದ್ದೇಶಿಸಲಾಗಿದೆ.
ಜಿಲ್ಲೆಯಾದ್ಯಂತ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳ ಮಾಹಿತಿ ಸಂಗ್ರಹಣೆ ಕಾರ್ಯವು ನಡೆಯುತ್ತಿದ್ದು, ಅಧಿಕಾರಿಗಳು ಸ್ವಸಹಾಯ ಸಂಘಗಳ ಗುಂಪಿನ ಮಾಹಿತಿ ಒದಗಿಸಬೇಕು ಎಂದರು.
ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ನಿರಂಜನ್ ಮಾತನಾಡಿ, ಹಾಲು ಉತ್ಪಾದಕರ ಸಂಘಗಳಲ್ಲಿ ಹಾಲು ಖರೀದಿಸುವಾಗ ಗುಣಮಟ್ಟಕ್ಕೆ ತಕ್ಕಂತೆ ಹಣನೀಡಬೇಕು. ಜಾನುವಾರುಗಳ ಸಂಖ್ಯೆಯನ್ನಾಧರಿಸಿ ಪಶು ಆಹಾರ ವಿತರಿಸಬೇಕೆಂದು ಕೆ.ಎಂ.ಎಫ್ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಸುಜಾತ ಶಿವಲಿಂಗಪ್ಪ, ಮುಖ್ಯ ಯೋಜನಾಧಿಕಾರಿ ಸುಬ್ಬರಾವ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.