ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಪ್ರಗತಿ ವಿರೋಧಿಯಾಗಿದ್ದು, ಕೇವಲ ಚುನಾವಣೆಯನ್ನೇ ಕೇಂದ್ರೀಕರಿಸಿರುವ ಘೋಷಣೆಗಳಿಂದ ತುಂಬಿದೆ. ಈ ಬಜೆಟ್ನಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ತುಳಿತಕ್ಕೊಳಗಾದವರು, ದುಡಿಯುವ ವರ್ಗಗಳು, ಮಹಿಳೆಯರನ್ನು ನಿರ್ಲಕ್ಷಿಸಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರೈತರಿಗೆ ಶಕ್ತಿ ತುಂಬಬಲ್ಲ ಮಹತ್ವದ ಯೋಜನೆಗಳು ಬಜೆಟ್ನಲ್ಲಿಲ್ಲ. ರೇಷ್ಮೆ ಬೆಳೆಗಾರರು, ತೋಟಗಾರಿಕೆ ಬೆಳೆಗಾರರ ಅಭಿವೃದ್ಧಿಗೆ ಪೂರಕವಾದ ಯಾವ ಕ್ರಮಗಳನ್ನೂ ಪ್ರಕಟಿಸಿಲ್ಲ. ಹಳೆಯ ಯೋಜನೆಗಳನ್ನೇ ಹೊಸ ಸ್ವರೂಪದಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿ, ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದಿದ್ದಾರೆ.
ಗೋವುಗಳ ಸಂರಕ್ಷಣೆಗಾಗಿ 100 ಗೋಶಾಲೆಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ವಾಸ್ತವದಲ್ಲಿ ಇದೊಂದು ಪೊಳ್ಳು ಘೋಷಣೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಾಗ ಜಿಲ್ಲೆಗೊಂದು ಗೋಶಾಲೆ ತೆರೆಯುವುದಾಗಿ ಬಿಜೆಪಿ ಸರ್ಕಾರ ಕಳೆದ ವರ್ಷ ಪ್ರಕಟಿಸಿತ್ತು. ಈವರೆಗೆ ಒಂದು ಗೋಶಾಲೆಯೂ ಆರಂಭವಾಗಿಲ್ಲ. ಇವರು 100 ಗೋಶಾಲೆ ತೆರೆಯುವುದು ಕನಸಿನ ಮಾತು ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ಈ ಬಜೆಟ್ನಲ್ಲಿ ತೀವ್ರ ಅನ್ಯಾಯ ಮಾಡಲಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಕಳೆದ ವರ್ಷ ₹500 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದನ್ನು ₹400 ಕೋಟಿಗೆ ಇಳಿಕೆ ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳಿಗೆ ಕಳೆದ ವರ್ಷ ₹1,500 ಕೋಟಿ ಒದಗಿಸಲಾಗಿತ್ತು. ಈ ಬಾರಿ ಈ ಉದ್ದೇಶಕ್ಕೆ ನೀಡಿರುವ ಅನುದಾನ ₹ 200 ಕೋಟಿಯನ್ನೂ ದಾಟಿಲ್ಲ. ಕ್ರೈಸ್ತರ ಅಭಿವೃದ್ಧಿಗೆ ಹಿಂದಿನ ವರ್ಷ ₹ 200 ಕೋಟಿ ಒದಗಿಸಲಾಗಿತ್ತು. ಈ ಬಾರಿ ಕೇವಲ ₹ 50 ಕೋಟಿ ಒದಗಿಸಲಾಗಿದೆ.
ಆರೋಗ್ಯ ಕ್ಷೇತ್ರದ ಸುಧಾರಣೆಗೆ ಪೂರಕವಾದ ಕ್ರಮಗಳೇ ಬಜೆಟ್ನಲ್ಲಿಲ್ಲ. ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚು ಆದ್ಯತೆ ನೀಡಿಲ್ಲ. ನೀಟ್ ಪರೀಕ್ಷೆಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಯುವ ಕುರಿತು ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ. ಬದಲಿಗೆ, ನೀಟ್ ಪರೀಕ್ಷೆಗೆ ತರಬೇತಿ ನೀಡಲು ನೆರವಾಗುವ ಕಣ್ಣೊರೆಸುವ ಯೋಜನೆ ಪ್ರಕಟಿಸಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಈ ಸರ್ಕಾರದ ದ್ವಂದ್ವ ನಿಲುವು ಬಜೆಟ್ನಲ್ಲಿ ಬಹಿರಂಗವಾಗಿದೆ. ಹಿಜಾಬ್ ಕಾರಣ ಮುಂದಿಟ್ಟುಕೊಂಡು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಅವಕಾಶ ನಿರಾಕರಿಸುತ್ತಿರುವ ಇದೇ ಸರ್ಕಾರ, ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಶಾಲೆಗಳನ್ನು ತೆರೆಯುವ ಭರವಸೆ ನೀಡಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರದ ಹಾದಿಯಲ್ಲೇ ಸಾಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಇಲ್ಲಿಯೂ ಸಾರ್ವಜನಿಕ ಉದ್ಯಮಗಳನ್ನು ನಾಶ ಮಾಡಲು ಹೊರಟಿದೆ. ಸಾರ್ವಜನಿಕ ಉದ್ಯಮಗಳಿಂದ ಬಂಡವಾಳ ಹಿಂತೆಗೆಯಲು ಕ್ರಮಕೈಗೊಳ್ಳುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಇದು ಅಪಾಯಕಾರಿ ನಡೆ. ಇದರಿಂದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಬಂಡವಾಳಶಾಹಿಗಳ ಕೈವಶವಾಗಲಿವೆ ಎಂದು ದೂರಿದ್ದಾರೆ.
ಕ್ರೀಡಾಂಗಣಗಳನ್ನು ಬಳಸುವುದಕ್ಕೂ ಶುಲ್ಕ ಪಾವತಿಸಬೇಕಾದ ವ್ಯವಸ್ಥೆಯನ್ನು ತರುವ ಘೋಷಣೆ ಬಜೆಟ್ ನಲ್ಲಿದೆ. ಈ ಸರ್ಕಾರ ಎಷ್ಟು ಜನವಿರೋಧಿ ಎಂಬುದಕ್ಕೆ ಇದಕ್ಕಿಂತ ಸಾಕ್ಷ್ಯ ಬೇಕೆ? ಬಿಜೆಪಿ ಮತ್ತು ಸಂಘ ಪರಿವಾರದ ಗುಪ್ತ ಕಾರ್ಯಸೂಚಿಯನ್ನು ಜಾರಿಗೊಳಿಸುವ ಪ್ರಯತ್ನ ಈ ಬಜೆಟ್ನಲ್ಲಿ ವ್ಯಾಪಕವಾಗಿದೆ. ದೇವಸ್ಥಾನಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಲು ಕಾನೂನು ತರುವುದಾಗಿ ಘೋಷಿಸಲಾಗಿದೆ. ಸಂಘ ಪರಿವಾರದ ಒತ್ತಡಕ್ಕೆ ಮಣಿದು ಈ ಘೋಷಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಜೆಟ್ ಇಡೀ ರಾಜ್ಯಕ್ಕಾಗಿ ರೂಪಿಸಿದಂತೆ ಇಲ್ಲ. ಹೆಚ್ಚಿನ ಯೋಜನೆಗಳು ಮತ್ತು ಘೋಷಣೆಗಳು ಹಾವೇರಿ ಜಿಲ್ಲೆಗೆ ಸೀಮಿತವಾಗಿವೆ. ಮುಖ್ಯಮಂತ್ರಿಯವರು ತಮ್ಮ ತವರು ಜಿಲ್ಲೆಯನ್ನೇ ರಾಜ್ಯ ಎಂದು ಭಾವಿಸಿ ಬಜೆಟ್ ಮಂಡಿಸಿದಂತಿದೆ. ಇದು ಸ್ಪಷ್ಟವಾಗಿ ಅಭಿವೃದ್ಧಿ ವಿರೋಧಿ ಬಜೆಟ್. ದುಡಿಯುವ ವರ್ಗಗಳನ್ನು ನಿರ್ಲಕ್ಷಿಸಿರುವ ಈ ಬಜೆಟ್ನಲ್ಲಿ ಅಭಿವೃದ್ಧಿಯ ಮುನ್ನೋಟವೇ ಇಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.