ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸಲು ಪ್ರತಿ ತಾಲ್ಲೂಕಿನಲ್ಲಿ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳು ಅವಧಿಗೆ ‘ಮುಖ್ಯಮಂತ್ರಿಗಳ ಫೆಲೋಶಿಪ್’ಗೆ ಆಯ್ಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿ ಶುಕ್ರವಾರ ರಾಜ್ಯ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳ ಫೆಲೋಶಿಪ್ ಕಾರ್ಯಕ್ರಮಕ್ಕಾಗಿ ₹ 10 ಕೋಟಿ ಅನುದಾನ ಒದಗಿಸಲಾಗುವುದು’ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇವುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ₹ 100 ಕೋಟಿ ಒದಗಿಸಲಾಗುವುದು’ ಎಂದು ಹೇಳಿದರು.
Karnataka Budget 2023–Live
‘ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ ತರಬೇತಿಯನ್ನು ₹ 4 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗೆ ₹ 5 ಕೋಟಿ ಒದಗಿಸಲಾಗುವುದು’ ಎಂದರು.
ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ಏಳು ಸ್ಥಳಗಳ ಕಲಬುರಗಿ ಜಿಲ್ಲೆಯ ಚಿತ್ತಾಪುರ, ಯಾದಗಿರಿಯ ಶಾಹಾಪುರ ತಾಲ್ಲೂಕಿನಲ್ಲಿಯೂ ಹೊಸ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು’ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.