ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೇಕೆದಾಟುಗೆ ಪ್ರತ್ಯೇಕ ಯೋಜನಾ ವಿಭಾಗ: ಜಲಸಂಪನ್ಮೂಲ ಇಲಾಖೆಗೆ ಸಿಕ್ಕಿದ್ದು..

Published 16 ಫೆಬ್ರುವರಿ 2024, 6:29 IST
Last Updated 16 ಫೆಬ್ರುವರಿ 2024, 6:29 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ಪ್ರತ್ಯೇಕ ತಯೋಜನಾ ವಿಭಾಗ ರಚನೆ, .ಎತ್ತಿನಹೊಳೆ ಯೋಜನೆಗೆ ಆದ್ಯತೆ ಸೇರಿದಂತೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಜಲ ಸಂಪನ್ಮೂಲ ಇಲಾಖೆಯ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.

* ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು.

* ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ (Pre-Commissioning Test) ನೀರು ಹರಿಸಿ ಚಾಲನೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.

* ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಅಗತ್ಯವಿರುವ ಕಾನೂನಾತ್ಮಕ ಕ್ರಮಗಳನ್ನು ಮುಂದುವರೆಸಲಾಗುವುದು.

* ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು.

* ಪ್ರತಿಷ್ಠಿತ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು.

* ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು (ವಾಲ್ಮಿ) ಪ್ರಸಕ್ತ ಸಾಲಿನಲ್ಲಿ Centre of Excellence in Water Management ಆಗಿ ಉನ್ನತೀಕರಿಸಲಾಗುವುದು.

* ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು.

* ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆಗಳಾದ ಬೂದಿಹಾಳ್-ಪೀರಾಪುರ ಹಂತ-1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

*ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ ನೀರಿನ ಬಳಕೆಯ ದಕ್ಷತೆಯು ವೃದ್ಧಿಸಲಿದೆ.

* ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆಗಳಾದ

ಬೂದಿಹಾಳ್-ಪೀರಾಪುರ ಹಂತ-1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

* ಕರ್ನಾಟಕ ನೀರಾವರಿ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಕಲಬುರಗಿಯ ಯಡಳ್ಳಿ ಹಾಗೂ ತೆರ್ನಳ್ಳಿ, ಉಡುಪಿ ಜಿಲ್ಲೆಯ ಸ್ವರ್ಣ ಹಾಗೂ ಸಿದ್ದಾಪುರ, ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಹನವಾಳ, ಬೆಳಗಾವಿಯ ಜಿಲ್ಲೆಯ ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ರಾಯಚೂರು ಜಿಲ್ಲೆಯ ಗುಂಜಳ್ಳಿ, ಕಲಬುರಗಿ ಜಿಲ್ಲೆಯ ಆಳಂದ, ಬೀದರ್ ಜಿಲ್ಲೆಯ ಔರಾದ್, ಬೆಳಗಾವಿ ಜಿಲ್ಲೆಯ ಅರಬಾವಿ, ಹಿರೆಬಾಗೇವಾಡಿ, ಸಂತಿ ಬಸ್ತವಾಡ, ಕಾಗವಾಡ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಿರವತ್ತಿ, ಗದಗ ಜಿಲ್ಲೆಯ ಜಾಲವಾಡಗಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ 7,280 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಸ್ತಾಪಿತ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 97,698 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.

* ಕೃಷ್ಣಾ ಭಾಗ್ಯ ಜಲ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಬಾಗಲಕೋಟೆ ಜಿಲ್ಲೆಯ ಕೆರೂರು, ವಿಜಯಪುರ ಜಿಲ್ಲೆಯ ಹೊರ್ತಿ-ರೇವಣಸಿದ್ದೇಶ್ವರ, ಚಿಮ್ಮಲಗಿ, ಮುಳವಾಡ, ಯಾದಗಿರಿ ಜಿಲ್ಲೆಯ ಭೀಮಾ ಪ್ಲಾಂಕ್, ಪ್ರಸಕ್ತ ಸಾಲಿನಲ್ಲಿ 3,779 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 1,09,350 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.

*ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.

* ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.

* ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.

* ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಯೋಜನೆ ರೂಪಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT