ಬೆಂಗಳೂರು: ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹ 20 ಕೋಟಿ ಅನುದಾನವನ್ನು ಬಸವರಾಜ ಬೊಮ್ಮಾಯಿ ಘೋಷಿಸಿದರು.
ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದ ಅವರು, ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿರುವ ಕರ್ನಾಟಕ ಕಲಾಗ್ರಾಮ ಅಭಿವೃದ್ಧಿ ಮಾಡಲಾಗುವುದು’ ಎಂದು ತಿಳಿಸಿದರು.
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ ಮಾಡುವುದಾಗಿಯೂ ಸಿಎಂ ಹೇಳಿದರು.
ಯೋಗಿ ನಾರಾಯಣ ಯತೀಂದ್ರರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ವರ್ಷ ಮಾ.27ಕ್ಕೆ ಆಚರಣೆ ಮಾಡಲಾಗುವುದೆಂದು ಬೊಮ್ಮಾಯಿ ಘೋಷಿಸಿದರು.
‘ಸಾಹಿತಿಗಳಾದ ಡಾ. ಸಿದ್ಧಲಿಂಗಯ್ಯ, ಎಂ. ಚಿದಾನಂದಮೂರ್ತಿ, ಚಂದ್ರಶೇಖರ ಪಾಟೀಲ ಹಾಗೂ ಚನ್ನವೀರ ಕಣವಿ ಅವರ ಅಮೂಲ್ಯ ಸಾಹಿತ್ಯಗಳನ್ನು ಉಳಿಸಲು ವಿಶೇಷ ಯೋಜನೆ ರೂಪಿಸಲಾಗುವುದು’ ಎಂದು ಸಿಎಂ ಹೇಳಿದರು.
‘ಹಾವೇರಿಯಲ್ಲಿ ₹ 2 ಕೋಟಿ ವೆಚ್ಚದಲ್ಲಿ ಡಾ. ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ ನಿರ್ಮಾಣ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.
‘ಕಾಸರಗೋಡಿನಲ್ಲಿ ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ ಹಾಗೂ ಅಕ್ಕಲಕೋಟೆಯಲ್ಲಿ ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ಮತ್ತು ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು’ ಎಂದು ಅವರು ಹೇಳಿದರು.