ಬೆಂಗಳೂರು: ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳನ್ನು ಗಮನದಲ್ಲಿರಿಸಿಕೊಂಡು ಸ್ಥಾಪಿಸಲಾಗಿರುವ ಶಿವಮೊಗ್ಗ ಕೃಷಿ ವಿಶ್ವ ವಿದ್ಯಾಲದ ಅಭಿವೃದ್ಧಿ ಕಾರ್ಯ ವಿಸ್ತರಣೆಗೆ ₹ 155 ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ನಲ್ಲಿ ಘೋಷಿಸಿದ್ದಾರೆ.
7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಅವರು, ‘ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿಸಾಗರ ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ 787 ಎಕರೆ ಕಂದಾಯ ಭೂಮಿಯನ್ನು ಹಂಚಿಕೆ ಮಾಡಲಾಗಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು 2020–21ನೇ ಸಾಲಿನಲ್ಲಿ ಪೂರ್ಣಗೊಳಿಸಿ ಇರುವಕ್ಕಿಯಲ್ಲಿ ತರಗತಿಗಳನ್ನು ಪ್ರಾರಂಭಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
‘ತೋಟಗಾರಿಕೆ ಬೆಳೆಗಳ ಸುಗಮ ನಿರ್ವಹಣೆಗೆ 5000 ಮೆಟ್ರಿಕ್ ಟನ್ ಸಾಮರ್ಥ್ಯದ 10 ಶೀತಲಗೃಹಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.
ಅಡಿಕೆ ಬೆಳೆಗಾರರ ಪ್ರಾಥಮಿಕ ಸಹಕಾರ ಸಂಘಗಳಿಗೆ 2 ಲಕ್ಷದವರೆಗಿನ ಸಾಲಕ್ಕೆ ಶೇ 5ರಷ್ಟು ಬಡ್ಡಿ ವಿನಾಯ್ತಿ ನೀಡುವುದಾಗಿಯೂ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.